Publish Date: Wed, 03 Sep 2025 (17:42 IST)
Updated Date: Wed, 03 Sep 2025 (17:46 IST)
ಕೊಡಿಗೇನಹಳ್ಳಿ: ಈಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನಿಡಿ, ಪಕ್ಷದಿಂದ ವಜಾಗೊಂಡಿರುವ ಶಾಸಕ ಕೆಎನ್ ರಾಜಣ್ಣ ಅವರು ತಮ್ಮ ರಾಜಕೀಯದ ಮುಂದಿನ ನಡೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಈಚೆಗೆ ರಾಜಣ್ಣ ಅವರು ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆಂಬ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಜೋರಾಗಿ ಹರಿದಾಡಿತ್ತು. ಈ ಸಂಬಂಧ ಕೊಡಿಗೇನಹಳ್ಳಿಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ಯಾವ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದರೂ ಗೆಲುವು ಸಾಧಿಸುತ್ತೇನೆ. ಪಕ್ಷೇತರನಾಗಿ ನಿಂತರೂ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನೇಕೆ ಬಿಜೆಪಿ ಸೇರಲಿ ಎಂದು ಪ್ರಶ್ನಿಸಿದರು. ಬಿಜೆಪಿ ಸೇರುವವರು ಸೇರುತ್ತಾರೆ. ನಾನು ಯಾವ ಪಕ್ಷದಿಂದ ಸ್ಪರ್ಧಿಸಿದರೂ ಗೆಲ್ಲುವ ಶಕ್ತಿ ಇದೆ. ನಾನೇಕೆ ಪಕ್ಷ ಬಿಡಬೇಕು. ಪಕ್ಷ ನನಗೆ ಏನು ತೊಂದರೆ ಮಾಡಿದೆ? ಪ್ರತಿ ಕ್ಷೇತ್ರದಲ್ಲೂ ಯಾರನ್ನಾದರೂ ಗೆಲ್ಲಿಸುವ, ಸೋಲಿಸುವ ಶಕ್ತಿ ನನಗಿದೆ ಎಂದು ಅಚ್ಚರಿ ಹೇಳಿಕೆ ನೀಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ತನಕ ಹಾಗೂ ಪಕ್ಷದ ನೇತೃತ್ವ ವಹಿಸಿಕೊಂಡಿರುವ ವರೆಗೆ ನನ್ನ ಭವಿಷ್ಯಕ್ಕೆ ಯಾವುದೇ ತೊಂದರೆಯಿಲ್ಲ. ಅವರು ಇರುವವರೆಗೆ ನಾನು ಪ್ರೀತಿ. ವಿಶ್ವಾಸ ಉಳಿಸಿಕೊಂಡು ಹೋಗುತ್ತೇನೆಂದರು.
ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಮತ ಕಳ್ಳತನ ಹೋರಾಟ ಬೆಂಬಲಿಸುತ್ತೇನೆ. ನನ್ನನ್ನು ಮತ್ತೆ ಸಚಿವರನ್ನಾಗಿ ಮಾಡುವಂತೆ ಒತ್ತಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಹೋಗುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದರು.