Publish Date: Sat, 11 Mar 2023 (08:33 IST)
Updated Date: Sat, 11 Mar 2023 (09:35 IST)
ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಶನಿವಾರ ಮೃತಪಟ್ಟಿದ್ದಾರೆ. ಧ್ರುವ ನಾರಾಯಣ್ (62) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.
ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2004 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿ ಇತಿಹಾಸವನ್ನು ಸೃಷ್ಟಿಸಿದ್ದರು.
ನಂತರ 2008ರಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ 2009 ಹಾಗೂ 2014 ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು. ಆದರೆ ಸೋಲಿನ ಬಳಿಕವೂ ಆ್ಯಕ್ಟೀವ್ ಆಗಿದ್ದರು.
ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲೂ ಧ್ರುವನಾರಾಯಣ್ ಉತ್ತಮ ಹೆಸರು ಪಡೆದಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದಿದ್ದರು.
ವಿಧಾನ ಸಭಾ ಚುನಾವಣೆಗೆ ನಂಜನಗೂಡು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು. ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು.