Publish Date: Sat, 02 Jul 2022 (19:35 IST)
Updated Date: Sat, 02 Jul 2022 (19:38 IST)
ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರು ಭೀಷ್ಮಾಚಾರ್ಯ ಇದ್ದಂತೆ. ಅವರಿಗೆ ಸಾವು ಅನ್ನೋದು
ಅವರು ಬಯಸಿದಾಗಲೇ ಬರುತ್ತದೆಯೇ ಹೊರತು, ಯಾರೋ ಏನೋ ಹೇಳಿದಾಗ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು. ಈ ಕುರಿತು ಜೆಡಿಎಸ್ ಕಚೇರಿಯಲ್ಲಿ ಸುಧ್ದಿಗೋಷ್ಠಿಯಲ್ಲಿ ಮಾತನಾಡಿ ಸಿದ್ದರಾಮಯ್ಯನವರನ್ನು ಬೆಳೆಸಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲ. ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯಲು ಜೆಡಿಎಸ್ ಕಾರ್ಯಕರ್ತರು ಕಾರಣ. ಅದನ್ನು ಅವರು ಅರ್ಥಮಾಡಿಕೊಳ್ಳಬೇಕು. ಅಲ್ಲದೇ, ಸಿದ್ದರಾಮಯ್ಯನವರ ಹುಟ್ಟುಹಬ್ಬದ ಕಾರ್ಯಕ್ರಮ ಕೆಡಿಸಬೇಕೆಂದು ಕುಮಾರಸ್ವಾಮಿ ಹುನ್ನಾರ ನಡೆಸಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಹುಟ್ಟುಹಬ್ಬದ ಕಾರ್ಯಕ್ರಮ ಅದು ಅವರ ವೈಯಕ್ತಿಕ ವಿಚಾರ. ನಮ್ಮ ಪಕ್ಷಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೆಚ್ಡಿಕೆ ಸ್ಪಷ್ಟಪಡಿಸಿದರು. ದೇವೇಗೌಡರ ಕೊಡುಗೆ ಏನೆಂಬುದರ ಬಗ್ಗೆ ಅನೇಕ ಪುಸ್ತಕಗಳಲ್ಲಿ ಬರೆದಿದ್ದಾರೆ. ರಾಜಣ್ಣ ಹೇಳಿಕೆ ತಿರುಚಲಾಗಿದೆ ಎಂದು ಹೇಳುತ್ತಿದ್ದಾರೆ. ನನಗೆ ಸಿದ್ದರಾಮಯ್ಯನವರ ಮೇಲೆ ದ್ವೇಷ ಇಲ್ಲ. ನಾನು ಕಳೆದ ಒಂದು ತಿಂಗಳಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಬಗ್ಗೆ ಪ್ರಸ್ತಾಪಿಸಿ ಮಾತನಾಡಿಲ್ಲ. ಸಿದ್ದರಾಮಯ್ಯನವರ ಜನ್ಮದಿನ ಕಾರ್ಯಕ್ರಮಕ್ಕೆ ನಾವ್ಯಾಕೆ ಆಕ್ಷೇಪ ಮಾಡೋಣ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.