Publish Date: Mon, 10 Jan 2022 (17:54 IST)
Updated Date: Mon, 10 Jan 2022 (16:56 IST)
ಒಂದು ವೇಳೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದರೆ ವಿಧಿಯಿಲ್ಲದೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.
ಕೋವಿಡ್ ಸೋಂಕನ್ನು ತಡೆಗಟ್ಟಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತದೆ. ಆದರೆ ಕಳೆದ ಹಲವು ದಿನಗಳಿಂದ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಕೈ ಮೀರಿದರೆ ಲಾಕ್ಡೌನ್ ಅನಿವಾರ್ಯವಾಗುತ್ತದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಕಾಂಗ್ರೆಸ್ ಪಕ್ಷದವರೇ ಕಾರಣವಾಗುತ್ತಾರೆ. ಪಾದಯಾತ್ರೆ ಮಾಡಬೇಡಿ ಎಂದರೂ ಜನರನ್ನು ಗುಂಪುಗೂಡಿಸಿಕೊಂಡು ಪಾದಯಾತ್ರೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ನಾವು ಒಂದು ಹಂತದವರೆಗೆ ಸಹಿಸಿಕೊಳ್ಳಬಹುದು. ಇವರು ಜನರನ್ನು ಕೂಡಿಸಿಕೊಂಡು ಪಾದಯಾತ್ರೆ ಹೊರಟರೆ ಅದನ್ನು ಸರ್ಕಾರ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ.
ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಲಾಕ್ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದರು. ಕೆಲವರು ಸರ್ಕಾರ ಏನೂ ಮಾಡುವುದಿಲ್ಲ. ನಾವು ಹೇಗಾದರೂ ನಡೆದುಕೊಳ್ಳಬಹುದು ಎಂದು ಭಾವಿಸಿದ್ದಾರೆ. ನಮಗೆ ಜನರ ಪ್ರಾಣ ಮತ್ತು ಜೀವನ ಮುಖ್ಯ. ಪರಿಸ್ಥಿತಿ ಕೈ ಮೀರಿದರೆ ಏನು ಮಾಡಲು ಸಾಧ್ಯವಿಲ್ಲ ಎಂದರು.