ಬಹುಕೋಟಿ ಲಾಟರಿ ಹಗರಣ ಸಂಬಂಧ ರಾಜ್ಯದ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರಿಗೆ ಪತ್ರ ಬರೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆಯೊಳಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಈ ಬಹುಕೋಟಿ ಲಾಟರಿ ಹಗರಣದಲ್ಲಿ ರಾಜ್ಯದ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳೇ ಭಾಗಿಯಾಗಿದ್ದಾರೆ ಎಂಬ ಸಂಗತಿಯಿಂದ ನನಗೆ ಆಘಾತವಾಗಿದೆ. ಆದ್ದರಿಂದ ಇಂದು ಸಂಜೆಯೊಳಗೆ ಪ್ರಕರಣದ ಸಂಪೂರ್ಣ ವರದಿಯನ್ನು ರಾಜಭವನಕ್ಕೆ ತಲುಪಿಸಿ ಎಂದು ಸೂಚಿಸಿದ್ದಾರೆ.
ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಬಿತ್ತರವಾದ ಸುದ್ದಿಯಿಂದ ಮಾಹಿತಿ ತಿಳಿದಿದ್ದು, ಹಗರಣದಲ್ಲಿ ಪೊಲೀಸ್ ಅಧಿಕಾರಿಗಳ ಕೈವಾಡವೇ ಇರುವುದರಿಂದ ತುಂಬಾ ಆಘಾತಕ್ಕೊಳಗಾಗಿದ್ದೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದಾರೆ.