ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಕೈವಾಡವಿಲ್ಲ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್, ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಕೈವಾಡ ಕಂಡುಬರುತ್ತಿಲ್ಲ. ಡಿವೈಎಸ್ಪಿ ಗಣಪತಿ ಅವರು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದ ವೀಡಿಯೋದಲ್ಲಿ ಜಾರ್ಜ್ ಅವರ ಹೆಸರು ಪ್ರಸ್ತಾಪಿಸಿದ್ದಾರೆ. ಆದರೆ, ತನಿಖೆಯ ನಂತರವಷ್ಟೆ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ.
ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ತನಿಖೆಯ ವರದಿ ಬರುವವರೆಗೂ ಏನು ಹೇಳಲು ಬರುವುದಿಲ್ಲ ಎಂದು ಹೇಳಿದರು.
ಹುತಾತ್ಮ ಪಿಎಸ್ಐ ಮಲ್ಲಿಕಾರ್ಜುನ್ ಬಂಡೆ ಅವರ ಪತ್ನಿ ಮಲ್ಲಮ್ಮ ಸಾವಿಗೆ ವಿಷಾದ ವ್ಯಕ್ತಪಡಿಸಿದ ಗೃಹ ಸಚಿವರು, ಬಂಡೆ ಕುಟುಂಬಕ್ಕೆ ನೀಡಬೇಕಾಗಿದ್ದ ಪರಿಹಾರವನ್ನು ಈಗಾಗಲೇ ನೀಡಿದ್ದೇವೆ. ಅವರ ಮಕ್ಕಳಿಗೆ ಸರಕಾರದಿಂದ ಉಚಿತ ಶಿಕ್ಷಣವನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.