ಬಂಧನಕ್ಕೊಳಗಾಗಿದ್ದ ಮಹದಾಯಿ ಹೋರಾಟಗಾರರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ.
ಪ್ರತಿವಾರ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಜಿಲ್ಲೆಯಿಂದ ಹೊರ ಹೋಗಬೇಕಾದರೆ ನ್ಯಾಯಾಲಯದ ಅನುಮತಿ ಪಡೆಯಬೇಕು ಹಾಗೂ ಸಾಕ್ಷ್ಯ ನಾಶ ಮಾಡದಂತೆ ಷರತ್ತು ವಿಧಿಸಿ ಧಾರವಾಡ ಜಿಲ್ಲಾ ನ್ಯಾಯಾಲಯ ಬಂಧನಕ್ಕೊಳಗಾಗಿದ್ದ 187 ಹೋರಾಟಗಾರರಿಗೆ ಜಾಮೀನು ನೀಡಿದೆ.
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.5 ಟಿಎಂಸಿ ಕುಡಿಯುವ ನೀರು ಬಿಡುವಂತೆ ಕೋರಿ ಕರ್ನಾಟಕ ಸರಕಾರ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಿದ್ದರು.
ಕರ್ನಾಟಕ ರಾಜ್ಯಕ್ಕೆ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರಾದ ಜೆ.ಎಂ.ಪಾಂಜಾಲ್ ಅಧ್ಯಕ್ಷತೆಯ ಪೀಠ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಾರಿ ಹಿನ್ನೆಡೆಯಾಗಿತ್ತು.
ಮಹದಾಯಿ ನ್ಯಾಯಾಧೀಕರಣದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರೈತಪರ ಹಾಗೂ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಹೋರಾಟ ಉಗ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಹೋರಾಟಗಾರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ