Publish Date: Wed, 23 Oct 2019 (18:47 IST)
Updated Date: Wed, 23 Oct 2019 (18:49 IST)
ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಕೈಗೆ ಸಿಗದೆ ತಲೆಮರಿಸಿಕೊಂಡಿದ್ದಲ್ಲದೆ, ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ ಮಲ್ಲಿಕಾರ್ಜುನ ತಂದೆ ಚಂದ್ರಕಾಂತ ಕಡಬೂರ ಗೆ ಐ.ಪಿ.ಸಿ. ಕಲಂ 353 ಮತ್ತು 332ರಲ್ಲಿನ ಅಪರಾಧಕ್ಕೆ ಏಕಕಾಲದಲ್ಲಿ 2 ವರ್ಷ ಜೈಲು ಶಿಕ್ಷೆ ಮತ್ತು 2000 ರೂ. ದಂಡ ವಿಧಿಸಿ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಚಪ್ಪ ತಾಳಿಕೋಟೆ ತೀರ್ಪು ನೀಡಿದ್ದಾರೆ.
ಮಲ್ಲಿಕಾರ್ಜುನ ಕಡಬೂರ ಗುಲಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ. ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆಯ ಪೊಲೀಸರು ಆತನನ್ನು ಬಂಧಿಸಲು ಹೋಗಿದ್ದರು. ಆಗ ಠಾಣೆಯ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಹಾಗೂ ಹತ್ಯೆಗೆ ಯತ್ನಿಸಿದ್ದನು.
ಈ ಅಪರಾಧಕ್ಕೆ 2 ವರ್ಷ ಜೈಲು ಹಾಗೂ 1,000 ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ ಮತ್ತೆ 3 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ಕಲಂ 332ರಲ್ಲಿನ ಅಪರಾಧಕ್ಕೆ 2 ವರ್ಷ ಜೈಲು ಶಿಕ್ಷೆ ಮತ್ತು 1,000 ದಂಡ, ತಪ್ಪಿದಲ್ಲಿ 3 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.