ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಕೆಲ ತಿಂಗಳಿಂದ ಗೃಹಿಣಿಯರ ಖಾತೆಗೆ ಜಮೆಯಾಗಿಲ್ಲ. ಕಾದು ಕಾದು ಸುಸ್ತಾಗಿರುವ ಮಹಿಳೆಯರಿಗೆ ಕೊನೆಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಗುಡ್ನ್ಯೂಸ್ ನೀಡಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಅವರು, ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಜಮೆಯಾದಗಿರುವುದರಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ₹750, ಸಹಾಯಕಿಯರ ಗೌರವಧನವನ್ನು ₹500 ಹೆಚ್ಚಿಸಿ ಘೋಷಿಸಿದ್ದೇವೆ ಎಂದು ಹೇಳಿದರು.
ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮಿ ಯೋಜನೆಯ ಹಣ ಜನವರಿಯಿಂದ ಕೊಡಬೇಕಾಗಿದ್ದು, ಶೀಘ್ರದಲ್ಲೇ ಅದನ್ನು ಕೊಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಚೆಗೆ ವಿಧಾನ ಪರಿಷತ್ನಲ್ಲಿ ಭರವಸೆ ನೀಡಿದ್ದರು.