Publish Date: Sat, 22 Jun 2019 (15:52 IST)
Updated Date: Sat, 22 Jun 2019 (15:55 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರ ಕ್ಷಮೆ ಕೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಹೇರೂರು (ಬಿ) ಗ್ರಾಮದಲ್ಲಿ ನಡೆಯಬೇಕಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಳೆಯಿಂದ ಮೂಂದೂಡಿದ್ದು ಅನಾನುಕೂಲವಾಗಿರುವುದಕ್ಕೆ ಸಾರ್ವಜನಿಕರ ಕ್ಷಮೆಯಾಚಿಸುತ್ತೇನೆ. ಮುಂದಿನ ಗ್ರಾಮವಾಸ್ತವ್ಯ ಎಲ್ಲಿ ಎನ್ನುವುದರ ಕುರಿತು ಜುಲೈ ಮೊದಲ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ವಾಸ್ತವ್ಯದಲ್ಲಿ ಸಲ್ಲಿಸಬೇಕಾಗಿದ್ದ ಕಲಬುರಗಿ ಜಿಲ್ಲೆಯ 28 ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಡಲಾಗಿತ್ತು. ನಡೆಯಬೇಕಾಗಿದ್ದ ಸಿಎಂ ಅವರ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯದಲ್ಲಿ ಬಹುತೇಕ ಬೇಡಿಕೆಗಳು ಈಡೇರಿಸುವ ನಿರೀಕ್ಷೆ ಮಾಡಲಾಗಿತ್ತು. ಆದರೆ, ಭಾರೀ ಮಳೆ ಬಿದ್ದ ಪರಿಣಾಮ ಹೇರೂರು ( ಬಿ) ಗ್ರಾಮದಲ್ಲಿ ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿದೆ. ಆದರೂ ಮಳೆ ಬಂದಿರುವುದು ಹರ್ಷ ತರುವ ವಿಚಾರವಾಗಿದ್ದು, ರೈತರು ಮುಂಗಾರು ಸಾಲಿನ ಕೃಷಿಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಸಮಾಜಕಲ್ಯಾಣ ಇಲಾಖೆಯ ವತಿಯಿಂದ ಹೇರೂರು (ಬಿ) ಗ್ರಾಮದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಈಗಾಗಲೇ ರೂ 1.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಗ್ರಾಮ ಪಂಚಾಯತ ಮಟ್ಟದಲ್ಲಿ ಮಾಡಬೇಕಾಗಿರುವ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಿಎಂ ಬಂದು ಮಾಡಬೇಕಾಗಿದೆ ಇದು ಆಡಳಿದ ವೈಫಲ್ಯವಲ್ಲವೇ? ಎನ್ನುವ ಪ್ರಶ್ನೆ ಉತ್ತರಿಸಿದ ಸಚಿವರು, ಕೆಲವೊಂದು ಸಂದರ್ಭಗಳಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಜೊತೆಗೆ ಸಮಗ್ರ ಅಭಿವೃದ್ದಿಗೆ ಸಾರ್ವಜನಿಕರ ಸಹಕಾರ ಹಾಗೂ ಬೆಂಬಲವೂ ಕೂಡಾ ಬೇಕು ಎಂದರು.