Select Your Language

Notifications

webdunia
webdunia
webdunia
webdunia

ತಳಕಲ್ ನಲ್ಲಿ ಮಾದರಿ ಇಂಜಿನಿಯರಿಂಗ್ ಕಾಲೇಜು

ತಳಕಲ್ ನಲ್ಲಿ ಮಾದರಿ ಇಂಜಿನಿಯರಿಂಗ್ ಕಾಲೇಜು
Bangalore , ಶನಿವಾರ, 25 ಫೆಬ್ರವರಿ 2017 (21:24 IST)
ಕೊಪ್ಪಳ ಜಿಲ್ಲೆ ತಳಕಲ್ ನಲ್ಲಿ 132 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಇಡೀ ಕರ್ನಾಟಕ ರಾಜ್ಯಕ್ಕೆ, ಮಾದರಿ ಕಾಲೇಜು ಆಗಲಿದೆ ಎಂದು ಉನ್ನತ ಶಿಕ್ಷಣ ಉನ್ನತ ಶಿಕ್ಷಣ ಖಾತೆ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ.
 
ತಳಕಲ್ ಗ್ರಾಮದ ಬಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣವಾಗಲಿರುವ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿಯೇ ಅತ್ಯುತ್ತಮ ಹಾಗೂ ಮಾದರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ.  ಇದಕ್ಕಾಗಿ 32 ಎಕರೆ ವಿಸ್ತಾರದ ಜಮೀನನ್ನು ಈಗಾಗಲೆ ಸರ್ಕಾರದ ವಶಕ್ಕೆ ಪಡೆಯಲಾಗಿದ್ದು, ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರ ಈಗಾಗಲೆ 132 ಕೋಟಿ ರೂ. ಗಳನ್ನು ಮಂಜೂರು ಮಾಡಿದೆ.  ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ ಇಂಜಿನಿಯರಿಂಗ್ ಕಾಲೇಜಿನಲ್ಲಿ 250 ವಿದ್ಯಾರ್ಥಿನಿಯರು ಹಾಗೂ 500 ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗುವುದು.
 
ಬೋಧಕರು, ಬೋಧಕೇತರ ಸಿಬ್ಬಂದಿ ವರ್ಗದವರಿಗೂ ಇದೇ ಸ್ಥಳದಲ್ಲಿ ವಸತಿಗೃಹ ಒದಗಿಸಲಾಗುವುದು.  ಕಾಲೇಜು ಕಟ್ಟಡ ನಿರ್ಮಾಣಕ್ಕೆ 24 ತಿಂಗಳ ಕಾಲಮಿತಿ ಇದ್ದು, ಮಹಾರಾಷ್ಟ್ರದ ಬಿ.ಜಿ. ಶಿರ್ಕೆ ಕನ್ಸ್ಟ್ರಕ್ಷನ್ ಕಂಪನಿ ಗುತ್ತಿಗೆ ಪಡೆದುಕೊಂಡಿದೆ.  ಆದರೂ 2018 ರ ಮಾರ್ಚ್ ಅಂತ್ಯದೊಳಗೆ ಕಟ್ಟಡವನ್ನು ಪೂರ್ಣಗೊಳಿಸಿ ನೀಡುವುದಾಗಿ ಕಂಪನಿ ಭರವಸೆ ನೀಡಿದೆ.  ಬರುವ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಮುಖ್ಯಮಂತ್ರಿಗಳನ್ನು ಆಹ್ವಾನಿಸಿ, ಕೊಪ್ಪಳ ಮೆಡಿಕಲ್ ಕಾಲೇಜು ಉದ್ಘಾಟನೆ, ಇಂಜಿನಿಯರಿಂಗ್ ಕಾಲೇಜು ಭೂಮಿಪೂಜೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಡಿಸಲಾಗುವುದು.  ಇಂಜಿನಿಯರಿಂಗ್ ಕಾಲೇಜಿಗೆ ಸದ್ಯ ಬಿಇ ಮೆಕ್ಯಾನಿಕಲ್, ಬಿಇ ಕಂಪ್ಯೂಟರ್ ಸೈನ್ಸ್ ಸೇರಿದಂತೆ 06 ಕೋರ್ಸ್ ಗೆ ಮಂಜೂರಾತಿ ನೀಡಲಾಗಿದೆ.  ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ರೈಲ್ವೆ ಇಂಜಿನಿಯರಿಂಗ್ ಕೋರ್ಸ್ ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಅವರು ಕೂಡ ತಾತ್ವಿಕ ಒಪ್ಪಿಗೆ ನೀಡಿದ್ದಾರೆ.  ಇದೇ ಇಂಜಿನಿಯರಿಂಗ್ ಕಾಲೇಜಿನಲ್ಲಿ ರೈಲ್ವೆ ಇಂಜಿನಿಯರಿಂಗ್ ಕೋರ್ಸ್ ಪ್ರಾರಂಭಿಸಲು ಯತ್ನಿಸಲಾಗುವುದು ಎಂದು ಸಚಿವರು ಹೇಳಿದರು.
 
ಎರಡು ವರ್ಷದೊಳಗೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ತರಗತಿಗಳು ಪ್ರಾರಂಭವಾಗಲಿವೆ.  ಬರುವ ದಿನಗಳಲ್ಲಿ ಇಂಜಿನಿಯರಿಂಗ್ ಪಿಜಿ ಕೇಂದ್ರವನ್ನು ಇಲ್ಲಿಯೇ ಪ್ರಾರಂಭಿಸಲಾಗುವುದು.  ಇದಕ್ಕೆ ಬೇಕಾಗುವ 20 ಎಕರೆ ಜಮೀನನ್ನು ಒದಗಿಸಲಾಗುವುದು.  ಗಂಗಾವತಿಯಲ್ಲಿ ಬರುವ ಶೈಕ್ಷಣಿಕ ವರ್ಷದಿಂದ ಇಂಜಿನಿಯರಿಂಗ್ ಕಾಲೇಜು ಪ್ರಾರಂಭವಾಗಲಿದ್ದು, ಅಗತ್ಯವಿರುವ 07 ಕೋಟಿ ರೂ. ಅನುದಾನವನ್ನು ಈಗಾಗಲೆ ಒದಗಿಸಲಾಗಿದೆ ಎಂದು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರೆಡ್ಡಿ ಅವರು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಜೇಟ್ಲಿ ಬ್ಯಾಂಕ್ ಅಕೌಂಟ್ ದಾಖಲೆ ಕೊಡಿ ಎಂದು ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್