Publish Date: Sat, 06 Jul 2024 (15:10 IST)
Updated Date: Sat, 06 Jul 2024 (15:13 IST)
ಬೆಂಗಳೂರು: ಡೆಂಗ್ಯೂ ನಮ್ಮ ರಾಜ್ಯಾದ್ಯಂತ ಹರಡುತ್ತಿದೆ. ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಇದನ್ನು ವೈದ್ಯಕೀಯ ತುರ್ತು ಸ್ಥಿತಿ ಎಂದು ಘೋಷಿಸಬೇಕು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂ ಜ್ವರ ನಿಯಂತ್ರಣ ಎಂದರೆ ಸೊಳ್ಳೆಗಳ ನಿಯಂತ್ರಣ. ಡೆಂಗ್ಯೂ ಕಾಯಿಲೆಗೆ ನಿಖರವಾದ ಚಿಕಿತ್ಸೆ ಇಲ್ಲ. ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯವಾದುದು ಎಂದು ತಿಳಿಸಿದರು. ಡೆಂಗ್ಯೂ ಜ್ವರ ನಿಯಂತ್ರಣ ಆಗದೆ ಇದ್ದಲ್ಲಿ ಮಾರಕ ಕಾಯಿಲೆಗಳಾದ ಚಿಕೂನ್ ಗುನ್ಯಾ, ಝೀಕಾ ವೈರಸ್ ಕಾಯಿಲೆ ಬರಬಹುದು ಎಂದು ಎಚ್ಚರಿಸಿದರು.
ಸರಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ಪಡೆದರೆ ಅಂಥ ಆಸ್ಪತ್ರೆ, ಘಟಕಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಂಥ ಲ್ಯಾಬೊರೇಟರಿಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿದರು. ಫ್ಲೈಓವರ್, ಅಂಡರ್ ಪಾಸ್, ಅಗೆದ ರಸ್ತೆ, ಸೇತುವೆ ಮೊದಲಾದವು ಸಕಾಲದಲ್ಲಿ ಮುಗಿಯುತ್ತಿಲ್ಲ. ಎಲ್ಲವೂ ಅರ್ಧರ್ಧವಾಗಿ ನಿಲ್ಲುತ್ತವೆ. ಮಳೆ ಬಂದಾಗ ಅಲ್ಲೆಲ್ಲ ನೀರು ನಿಲ್ಲುತ್ತದೆ. ಇದರಿಂದ ಸೊಳ್ಳೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ ಎಂದು ವಿಶ್ಲೇಷಿಸಿದರು.
ಸೊಳ್ಳೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೆಲಸ ಮಾಡಬೇಕಿದೆ. ಡೆಂಗ್ಯೂ ನಿಯಂತ್ರಣಕ್ಕೆ ಒಂದು ಟಾಸ್ಕ್ ಫೋರ್ಸ್ ರಚಿಸಬೇಕಿದೆ ಎಂದು ತಿಳಿಸಿದರು. ಈ ಟಾಸ್ಕ್ ಫೋರ್ಸ್, ಪರಿಣತರ ಸಲಹೆ ಪಡೆಯಬೇಕು ಎಂದರು.
ಮಳೆಗಾಲದ ಸಮಸ್ಯೆಗಳಿಗೆ ಬೇಸಿಗೆ ಕಾಲದಲ್ಲೇ ಪರಿಹಾರ ಕಂಡುಕೊಳ್ಳಬೇಕು. ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು. ಒಬ್ಬ ವೈದ್ಯರು ಸೇರಿ 6-7 ಜನರು ಸತ್ತಿದ್ದು, ಸಾವಿರಾರು ಜನ ಸೋಂಕಿತರಿದ್ದಾರೆ. ಮಕ್ಕಳಲ್ಲೂ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಆದ್ದರಿಂದ ಎಲ್ಲ ಶಾಲೆ- ಕಾಲೇಜುಗಳಿಗೆ ಸುತ್ತೋಲೆ ಕಳಿಸಿ, ಶಾಲಾ ಆಡಳಿತದ ಜೊತೆ ಸಭೆ ನಡೆಸಬೇಕು. ಡೆಂಗ್ಯೂ ಸಂಕೀರ್ಣ ಸ್ಥಿತಿ ತಲುಪಿÀದರೆ ಅದಕ್ಕೆ ಚಿಕಿತ್ಸೆಯೇ ಇಲ್ಲ ಎಂದು ಗಮನ ಸೆಳೆದರು.