Publish Date: Thu, 05 Dec 2024 (15:54 IST)
Updated Date: Thu, 05 Dec 2024 (15:56 IST)
ಬೆಂಗಳೂರು: ಮುಡಾ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮೋದನೆ ನೀಡಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿದೆ.
ಇಂದು ನಡೆದ ವಿಚಾರಣೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠವು ವಾದ-ಪ್ರತಿವಾದ ಅಲಿಸಿ ಮುಂದಿನ ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿತು.
ಅಕ್ಟೋಬರ್ 24ರಂದು ಏಕಸದಸ್ಯ ಪೀಠದ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠವು ಸೆಪ್ಟೆಂಬರ್ 24 ರಂದು ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರ ಅನುಮೋದನೆಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.
ಹೈಕೋರ್ಟ್ ಏಕ ಪೀಠದ ಆದೇಶದ ನಂತರ, ಮರುದಿನವೇ ಇಲ್ಲಿನ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿ, ಡಿಸೆಂಬರ್ 24 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿತು.
ಮೈಸೂರಿನ ಲೋಕಾಯುಕ್ತ ಪೊಲೀಸರು ಸೆ.27ರಂದು ದಾಖಲಿಸಿರುವ ಎಫ್ಐಆರ್ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.