Publish Date: Wed, 17 Nov 2021 (21:53 IST)
Updated Date: Wed, 17 Nov 2021 (21:57 IST)
ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಸಂಗೀತ ನಿರ್ದೇಶಕ ಹಂಸಲೇಖ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ವೇದಿಕೆ, ವಿಪ್ರ ವೇದಿಕೆ ಸೇರಿದಂತೆ ಹಲವು ಬ್ರಾಹ್ಮಣ ಸಂಘಟನೆಗಳು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿವೆ.
ಅವಹೇಳನಕಾರಿ ಹೇಳಿಕೆ ವಿರೋಧಿಸಿರುವ ಸಂಘಟನೆಗಳು ಶ್ರೀಗಳ ಬೃಂದಾವನದಲ್ಲಿ ಬಹಿರಂಗವಾಗಿ ಕ್ಷಮೆ ಕೋರಬೇಕು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಈ ಸಂಬಂಧ ಪೊಲೀಸ್ ಕಮೀಷನರ್ ಕಚೇರಿಗೆ ತೆರಳಿ ದೂರು ನೀಡಿವೆ.
ವೇದಿಕೆಯ ಉಪಾಧ್ಯಕ್ಷ ಕೃಷ್ಣ ಮಾತನಾಡಿ, ಉನ್ನತ ಸ್ಥಾನದಲ್ಲಿದ್ದ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಶ್ರೀಗಳ ಬಗ್ಗೆ ತೇಜೋವಧೆ ಮಾಡಿರುವುದು ಸರಿಯಲ್ಲ. ಅವರು ಇಂತಹ ಹೇಳಿಕೆ ನೀಡುತ್ತಾರೆ ಎಂದು ಭಾವಿಸಲಿರಲಿಲ್ಲ. ಬ್ರಾಹ್ಮಣ ಸಮುದಾಯಕ್ಕೆ ತೀರಾ ನೋವು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ಶ್ರೀಗಳ ಬೃಂದಾವನದಲ್ಲಿ ಎಲ್ಲರ ಸಮ್ಮುಖದಲ್ಲಿ ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡರೀತಿಯಾಗಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.