Publish Date: Wed, 03 Sep 2025 (18:21 IST)
Updated Date: Wed, 03 Sep 2025 (18:23 IST)
ಹಾಸನ: ರಾಜ್ಯದ ವಿರೋಧ ಪಕ್ಷದ ತೀವ್ರ ವಿರೋಧದ ನಡುವೆಯೂ ಸಾಹಿತಿ ಬಾನು ಮುಷ್ತಾಕ್ಗೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಅಧಿಕೃತ ಆಹ್ವಾನವನ್ನು ನೀಡಿದೆ.
ಸಿಎಂ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಆದರೆ ಸಿಎಂ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಈಚೆಗೆ ಸಮರ್ಥಿಸಿಕೊಂಡಿದ್ದರು. ಅದರ ಬೆನ್ನಲ್ಲೇ ಸೆಪ್ಟೆಂಬರ್ 22ರಂದು ನಡೆಯಲಿರುವ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಇಂದು ಅಧಿಕೃತ ಆಹ್ವಾನ ನೀಡಿದೆ.
ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಸನದಲ್ಲಿರುವ ಬಾನು ಮುಷ್ತಾಕ್ ಅವರ ಮನೆಗೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ದಸರಾಗೆ ಬರುವಂತೆ ಅಧಿಕೃತ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಆನೆ ವಿಗ್ರಹ ನೀಡಿ ಆಹ್ವಾನ ಪತ್ರಿಕೆಯನ್ನು ನೀಡಿದರು.
ದಸರಾ ಆಹ್ವಾನವನ್ನು ಪ್ರೀತಿಯಿಂದ ಸ್ವೀಕರಿಸಿದ ಬಾನು ಮುಷ್ತಾಕ್ ತಾವು ಕಾರ್ಯಕ್ರಮಕ್ಕೆ ಬರುವುದಾಗಿ ತಿಳಿಸಿದ್ದಾರೆ.