Publish Date: Fri, 05 Jul 2024 (11:10 IST)
Updated Date: Fri, 05 Jul 2024 (11:18 IST)
ಬೆಂಗಳೂರು: ಇತ್ತೀಚೆಗೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿರುವ ಮುಡಾ ಸೈಟು ಹಂಚಿಕೆ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರ ಅವರಿಗೆ ಈಗ ವರ್ಗಾವಣೆಯ ಶಿಕ್ಷೆ ಸಿಕ್ಕಿದೆ!
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಈ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ.
ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಈಗಾಗಲೇ ಬಿಜೆಪಿ ಹೋರಾಟ ನಡೆಸುತ್ತಿದೆ. ಆದರೆ ಇದನ್ನು ಸಿಬಿಐಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟುಹಿಡಿದಿದ್ದಾರೆ. ಇದರಲ್ಲಿ ನನ್ನ ತಪ್ಪಿಲ್ಲ. ಮುಡಾ ತಪ್ಪು ಮಾಡಿದೆ. ಹಾಗೆ ನೋಡಿದರೆ ನಮಗೆ 62 ಕೋಟಿ ರೂ. ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ನಿನ್ನೆ ಹೇಳಿಕೆ ನೀಡಿದ್ದರು.
ಇದರ ನಡುವೆ ಈ ಹಗರಣವನ್ನು ಬಯಲಿಗೆಳೆದ ಡಿಸಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ ಬಳಿಕ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸರ್ಕಾರ ಆದೇಶ ನೀಡಿದ್ದು, ಆ ಪೈಕಿ ರಾಜೇಂದ್ರ ಕೂಡಾ ಸೇರಿದ್ದಾರೆ. ಅವರನ್ನು ಈಗ ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.