ನರ್ಸಿಂಗ್ ಕಾಲೇಜು ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಪ್ರೀತಿಸಿ ದೈಹಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಆಕೆ ಈ ದುಡುಕಿನ ಯತ್ನಕ್ಕೆ ಕೈ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೀಡಿತೆ ನೀಡಿರುವ ದೂರಿನನ್ವಯ ಪೊಲೀಸರು ಆರೋಪಿ ರವಿಲ್ ಶರೀಫ್ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಶಿರೂರು ಮಾರ್ಕೆಟ್ ಬಳಿಯ ನಿವಾಸಿ ರವಿಲ್ ಶರೀಫ್ ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳ ಹಿಂದೆ ಅವರಿಬ್ಬರಿಗೆ ಪರಿಚಯವಾಗಿತ್ತು. ಸ್ನೇಹ ಪ್ರೀತಿಗೆ ತಿರುಗಿದಾಗ ಶರೀಫ್ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಕೂಡಾ ಯುವತಿಯನ್ನು ಬಳಸಿಕೊಂಡಿದ್ದ ಎನ್ನಲಾಗುತ್ತಿದೆ.
ಆದರೆ ಯುವಕನ ಪೋಷಕರು ಮದುವೆಗೆ ಸಮ್ಮತಿಸದೆ ಮಗನಿಗೆ ಮತ್ತೊಂದು ಮದುವೆ ಮಾಡಲು ಸಿದ್ಧತೆ ನಡೆಸಿದ್ದರು. ಈ ಕಾರಣಕ್ಕೆ ಬೇಸತ್ತ ಯುವತಿ ಪ್ರಿಯಕರನೊಂದಿಗೆ ಜಗಳವಾಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುರತ್ಕಲ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.