Select Your Language

Notifications

webdunia
webdunia
webdunia
webdunia

ಸದ್ಯದಲ್ಲೇ ಹಳೆಯ ಬಡಾವಣೆ ಬಿಬಿಎಂಪಿಗೆ ಹಸ್ತಾಂತರ: ಎಸ್.ಆರ್.ವಿಶ್ವನಾಥ್

ಸದ್ಯದಲ್ಲೇ ಹಳೆಯ ಬಡಾವಣೆ ಬಿಬಿಎಂಪಿಗೆ ಹಸ್ತಾಂತರ: ಎಸ್.ಆರ್.ವಿಶ್ವನಾಥ್
bangalore , ಮಂಗಳವಾರ, 9 ಆಗಸ್ಟ್ 2022 (18:11 IST)
ಬನಶಂಕರಿ, ಅಂಜನಾಪುರ ಮತ್ತು ವಿಶ್ವೇಶ್ವರಯ್ಯ ಬಡಾವಣೆಗಳನ್ನು ಅಗತ್ಯವಿರುವ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿದ ಶೀಘ್ರದಲ್ಲೇ ಬಿಬಿಎಂಪಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿರುವ ಬನಶಂಕರಿ 6ನೇ ಹಂತ, ಜೆ ಪಿ ನಗರ 8 & 9 ನೇ ಹಂತ ಹಾಗೂ ಅಂಜನಾಪುರ ಮುದುವರೆದ ಬಡಾವಣೆಗಳ ಮೂಲಸೌಕರ್ಯ ಕುರಿತು ಎಸ್.ಆರ್.ವಿಶ್ವನಾಥ್, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಿಢೀರ್ ಸ್ಥಳ ಪರಿಶೀಲನೆ ನಡೆಸಿತು. 
ಈ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳ ಅಹವಾಲು ಸ್ವೀಕರಿಸಿದ ಎಸ್.ಆರ್.ವಿಶ್ವನಾಥ್ ಅವರು ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಳೆಯ ಬಡಾವಣೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಿ, ಆ ಬಡಾವಣೆಗಳನ್ನು ಬಿಬಿಎಂಪಿಗೆ ಹಸ್ತಾಂತರ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಬಿಡಿಎ ಕಾರ್ಯೋನ್ಮುಖವಾಗಿದೆ ಎಂದರು.
ನಾನಾ ಕಾರಣಗಳಿಂದಾಗಿ ಅಂಜನಾಪುರ, ಬನಶಂಕರಿ ಮತ್ತು ವಿಶ್ವೇಶ್ವರಯ್ಯ ಬಡಾವಣೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಳಂಬವಾಗಿದೆ. ಮತ್ತಷ್ಟು ವಿಳಂಬ ನೀತಿ ಅನುಸರಿಸದೇ ಈ ಬಡಾವಣೆಗಳಿಗೆ ಕುಡಿಯುವ ನೀರು, ಒಳಚರಂಡಿ, ವಿದ್ಯುತ್, ರಸ್ತೆ ಸಂಪರ್ಕ ಸೇರಿದಂತೆ ಇನ್ನಿತರೆ ಮೂಲಸೌಕರ್ಯಗಳನ್ನು ಕಲ್ಪಿಸಲು ಬಿಡಿಎ ಪ್ರಾಧಿಕಾರ ಮಂಡಳಿಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಕಳೆದ ಒಂದು ವರ್ಷದಲ್ಲಿ ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ್ದ ಜಾಗವನ್ನು ಅತಿಕ್ರಮಿಸಿದವರ ವಿರುದ್ಧ ಸಮರ ಸಾರಿ ಅವರಿಂದ ಕಾನೂನಿನಡಿ ಬಿಡಿಎ ಜಾಗವನ್ನು ಮರುವಶ ಪಡೆದುಕೊಳ್ಳುವ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇದರಿಂದ ಸಂಸ್ಥೆಗೆ ಸಾಕಷ್ಟು ಆದಾಯ ಬರುವುದರ ಜೊತೆಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಕಾರಣವಾಗಿದೆ ಎಂದರು.
ಇದುವರೆಗೆ 9 ಸಾವಿರ ಬಿಡಿಎಗೆ ಸೇರಿದ ನಿವೇಶನಗಳನ್ನು ಪತ್ತೆ ಮಾಡಿದ್ದು ಹಂತ ಹಂತವಾಗಿ ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಇದರಿಂದ ಇದುವರೆಗೆ ಸುಮಾರು 3 ಸಾವಿರ ಕೋಟಿ ರೂಪಾಯಿ ಆದಾಯ ಬಂದಿದೆ ಎಂದರು.
ಕುಡಿಯುವ ನೀರಿಗೆ ಆದ್ಯತೆ
ಬನಶಂಕರಿ ಮುಂದುವರಿದ ಬಡಾವಣೆಗೆ ಕುಡಿಯುವ ನೀರು ಪೂರೈಸುವ ಸಂಬಂಧ ಬೆಂಗಳೂರು ಜಲಮಂಡಳಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ಅದಕ್ಕೆ ಅಗತ್ಯವಿರುವ 54 ಕೋಟಿ ರೂಪಾಯಿಗಳ ಪೈಕಿ 27.50 ಕೋಟಿ ರೂಪಾಯಿಗಳನ್ನು ಬಿಡಿಎ ಜಲಮಂಡಳಿಗೆ ಸಂದಾಯ ಮಾಡಿದ್ದು, ಶೀಘ್ರದಲ್ಲೇ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದರು.
ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗೆ ಹಣದ ಕೊರತೆ ಇಲ್ಲ. ಜಲಮಂಡಳಿಯಿಂದ ಕಾಮಗಾರಿ ಆದ ತಕ್ಷಣ ಅವರಿಗೆ ಬಿಡಿಎ ಹಣ ಪಾವತಿಸಲಿದೆ ಎಂದು ತಿಳಿಸಿದರು.
ಬೆಂಗಳೂರು ದಕ್ಷಿಣ ಮತ್ತು ಯಶವಂತಪುರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಬಿಡಿಎ ಬಡಾವಣೆಗಳ ಮೂಲಸೌಕರ್ಯಕ್ಕಾಗಿ ಸುಮಾರು 400 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ಈಗಾಗಲೇ 200 ಕೋಟಿ ರೂಪಾಯಿಗಳ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದರು.
ಅದೇ ರೀತಿ ಅರ್ಕಾವತಿ ಬಡಾವಣೆಯ ಮೂಲಸೌಕರ್ಯಕ್ಕಾಗಿ 450 ಕೋಟಿ ರೂಪಾಯಿಗಳು ಮತ್ತು ಹೆಬ್ಬಾಳ ಮೇಲ್ಸೇತುವೆಯ ವಿಸ್ತರಣೆಗಾಗಿ 175 ಕೋಟಿ ರೂಪಾಯಿಗಳ ಯೋಜನೆಯನ್ನು ಬಿಡಿಎ ಕೈಗೆತ್ತಿಕೊಳ್ಳುತ್ತಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿದ್ದು, ಗುತ್ತಿಗೆದಾರರಿಗೆ ಹಣವನ್ನೂ ಬಿಡುಗಡೆ ಮಾಡಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲು ಸೂಚಿಸಲಾಗಿದೆ ಎಂದು ವಿಶ್ವನಾಥ್ ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎಂ.ಕೃಷ್ಣಪ್ಪ ಅವರು, ತಮ್ಮ ಕ್ಷೇತ್ರ ವ್ಯಾಪ್ತಿಯ ಅಂಜನಾಪುರ ಮತ್ತು ಬನಶಂಕರಿ ಬಡಾವಣೆಗಳಿಗೆ ಆದ್ಯತೆ ಮೇಲೆ ಕುಡಿಯುವ ನೀರು ಮತ್ತು ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಡಿಎ ಕಾರ್ಯದರ್ಶಿ ಆನಂದ್, ಅಭಿಯಂತರರಾದ ಸುರೇಶ್, ಅಶೋಕ್ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಹಾಜರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ - ಕಾಂಗ್ರೆಸ್ ವ್ಯಂಗ್ಯ