Publish Date: Thu, 14 Feb 2019 (13:55 IST)
Updated Date: Thu, 14 Feb 2019 (13:57 IST)
ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಬೆಂಬಲಿಗ ರಾಹುಲ್ ಕಿಣಿ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡನೆ ವ್ಯಕ್ತವಾಗುತ್ತಿದೆ.
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬಸ್ ನಿಲ್ದಾಣದ ಬಳಿ ಟೈರ್ ಗೆ ಬೆಂಕಿ ಪ್ರತಿಭಟನೆ ನಡೆಸಿದರು. ಬಳಿಕ ತಾಲ್ಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಣಾಯ್, ಜೆಡಿಎಸ್ ಭದ್ರಕೋಟೆಯನ್ನು ಭೇಧಿಸಿ ಶಾಸಕರಾಗಿದ್ದಾರೆ. ಜೊತೆಗೆ ಜನಪ್ರಿಯತೆ ಮತ್ತು ಅಭಿವೃದ್ಧಿ ಕೆಲಸಗಳನ್ನು ಸಹಿಸದೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಎಚ್.ಡಿ.ರೇವಣ್ಣ ಅವರು ಗೂಂಡಾ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ ಹಲ್ಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.
ಜನಪ್ರತಿನಿಧಿಗಳಿಗೆ ತೊಂದರೆ ನೀಡುವುದು ಅವರಿಗೆ ಹೊಸದೇನಲ್ಲ. ರಾಮಕೃಷ್ಣ ಹೆಗಡೆ ಅವರಿಗೆ ಹೆಚ್.ಡಿ.ದೇವೇಗೌಡ ಅವರು ತೊಂದರೆ ನೀಡಿದ್ದರು. ಅದನ್ನೆ ಮುಂದುವರೆಸಿರುವ ಮಕ್ಕಳು ಈಗ ಪ್ರೀತಂಗೌಡ ಅವರ ಮನೆ ಮತ್ತು ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಮತ್ತು ಸಚಿವ ರೇವಣ್ಣ ಅವರ ವಿರುದ್ಧ ಘೋಷಣೆ ಕೂಗಿದರು.