Publish Date: Wed, 10 Aug 2022 (19:53 IST)
Updated Date: Wed, 10 Aug 2022 (19:56 IST)
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವ ಬಗ್ಗೆ ಆಕ್ಷೆಪಣೆ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಆದೇಶ ನೀಡಿದೆ. ಕೇಂದ್ರೀಯ ತನಿಖಾ ದಳವು ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಎಫ್ಐಆರ್ನ್ನು ರದ್ದುಪಡಿಸಬೇಕೆಂದು ಕೋರಿ ಡಿಕೆ ಶಿವಕುಮಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ನೇತೃತ್ವದ ಏಕ ಸದಸ್ಯ ಪೀಠವು ಪ್ರತಿವಾದಿಗಳಾದ ಸಿಬಿಐಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಬಿಐ ಪರ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಅವರು, ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಎರಡು ವಾರ ಕಾಲಾವಕಾಶ ನೀಡುವಂತೆ ಕೋರಿದರು. ಇದಕ್ಕೆ ಶಿವಕುಮಾರ್ ಪರ ಹಿರಿಯ ವಕೀಲ ಸಿ.ಎಚ್ ಜಾಧವ್ ಅವರು ಆಕ್ಷೇಪಣೆಯ ಪ್ರತಿಯನ್ನು ಅರ್ಜಿದಾರರಿಗೆ ಮುಂಚಿತವಾಗಿ ನೀಡಲು ಆದೇಶಿಸಬೇಕೆಂದು ಮನವಿ ಮಾಡಿದರು.