Publish Date: Sun, 07 Nov 2021 (20:01 IST)
Updated Date: Sun, 07 Nov 2021 (20:05 IST)
ಬೆಂಗಳೂರು: 2023 ರ ಸಾರ್ವತ್ರಿಕ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಗಾಗಿ ಜೆಡಿಎಸ್ ಜನತಾ ಸಂಗಮ ಹೆಸರಿನಲ್ಲಿ ನ.08 ರಿಂದ ನ.17ರವರೆಗೆ ಸಂಘಟನಾ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಾ ಹಂತಗಳಲ್ಲೂ ಪಕ್ಷವನ್ನು ಸಂಘಟನೆ ಮಾಡಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ. 9 ದಿನಗಳ ಕಾಲ ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳ ಸಭೆ ನಡೆಯಲಿದೆ. ನ.17 ರಂದು ಈ ಕಾರ್ಯಾಗಾರ ಅಂತ್ಯವಾಗಲಿದೆ ಎಂದರು.
ದಿನಕ್ಕೆ ಎರಡು ಜಿಲ್ಲೆಗಳನ್ನು ಒಳಗೊಂಡಂತೆ ಸಭೆಗಳನ್ನು ನಡೆಸಲಾಗುವುದು. ಈ ಸಭೆಯಲ್ಲಿ ಮುಂದಿನ ಚುನಾವಣಾ ಸಿದ್ಧತೆ ಸಂಬಂಧ ಚರ್ಚಿಸಲಿದ್ದೇವೆ. ಮಹತ್ವದ ಸಭೆಯಲ್ಲಿ ಭಾಗಿಯಾಗುವ ಎಲ್ಲರಿಗೂ ಕಠಿಣ ಮತ್ತು ಸ್ಪಷ್ಟ ಮಾರ್ಗಸೂಚಿ ನೀಡಲಾಗುವುದು. ತದ ನಂತರ ಹೇಗೆ ಕೆಲಸ ಮಾಡಬೇಕು ಎಂಬುದನ್ನು ಸೂಚಿಸಲಾಗುವುದು ಎಂದರು.
ಜನತಾ ಪತ್ರಿಕೆ ಲೋಕಾರ್ಪಣೆ: ನ.8 ರಂದು ಪಕ್ಷದ ವಿಚಾರಗಳನ್ನು ಜನತೆ ಮತ್ತು ಪಕ್ಷದ ಕಾರ್ಯಕರ್ತರಿಗೆ ತಿಳಿಸುವ ಮಾಸಿಕ 'ಜನತಾ ಪತ್ರಿಕೆ' ಯನ್ನು ಬಿಡುಗಡೆ ಮಾಡಲಾಗುವುದು. ನಾಡಿನ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರು ಪತ್ರಿಕೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
ಸಂಪಾದಕೀಯ ನನ್ನ ನೇತೃತ್ವದಲ್ಲಿ ಈ ಪತ್ರಿಕೆ ಮೂಡಿ ಬರುತ್ತಿದ್ದು, ನಾಡಿನ ಜನರ ಆಶೋತ್ತರಗಳನ್ನು ಈಡೇರಿಸಲು ಹಾಗೂ ಪಕ್ಷದ ದನಿಯನ್ನು ಜನರಿಗೆ ಮುಟ್ಟಿಸುವ ಗುರಿಯನ್ನು ಹೊಂದಿದೆ. ಕಾರ್ಯಕರ್ತರಿಗೆ ಪಕ್ಷದ ಬಗ್ಗೆ ದಿಕ್ಸೂಚಿಯಾಗಿ ಹಾಗೂ ಮಾರ್ಗದರ್ಶಿಯಾಗಿ ಮುನ್ನಡೆಸುತ್ತದೆ. ಮಾತ್ರವಲ್ಲದೆ ನಾಡು, ನುಡಿ, ನೆಲ, ಜಲ, ಭಾಷೆ ಇತ್ಯಾದಿ ವಿಷಯಗಳನ್ನು ಒಳಗೊಂಡಿರುವ ಪತ್ರಿಕೆ ಇದಾಗಿದೆ ಎಂದರು.