Publish Date: Mon, 07 Jan 2019 (15:40 IST)
Updated Date: Mon, 07 Jan 2019 (15:42 IST)
ರಾಜ್ಯದ ಸಮ್ಮಿಶ್ರ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.
ರಾಜ್ಯ ಸಮ್ಮಿಶ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತೆರಿಗೆ ಹೆಚ್ಚಿಸಿ ರಾಜ್ಯದ ಜನತೆಗೆ ದ್ರೋಹವೆಸಗಿರುವುದನ್ನು ಖಂಡಿಸಿ ಹಾಗೂ ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಕಛೇರಿ ಸಿಬ್ಬಂದಿಯ ಬಳಿ 25 ಲಕ್ಷ ಹಣ ಸಿಕ್ಕಿರುವ ಕುರಿತು ಈ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರವನ್ನು ಖಂಡಿಸಿ ಶಾಸಕ ಎಲ್. ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರಿನ ಗಾಂಧಿ ಚೌಕದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದ್ದು, ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಪೆಟ್ರೋಲ್ ಡೀಸೆಲ್ ದರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು. ಕೇಂದ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾದಾಗ ಬೊಬ್ಬರಿಯುತ್ತಿದ್ದ ಸಮ್ಮಿಶ್ರ ಸರ್ಕಾರದ ಪ್ರಮುಖರು, ಪೆಟ್ರೋಲ್ ಡೀಸೆಲ್ ದರ ಕಡಿಮೆಯಾದ ಮೇಲೆ ಚಕಾರವೆತ್ತಲಿಲ್ಲ.
ಇದೀಗ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ತೈಲ ಬೆಲೆಯ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು. ಅಷ್ಟೇ ಅಲ್ಲದೇ ಸಚಿವ ಪುಟ್ಟರಂಗಶೆಟ್ಟಿಯವರ ಕಛೇರಿಯಲ್ಲಿ 25 ಲಕ್ಷರೂ. ಹಣ ಲಭಿಸಿದೆ. ಸಮ್ಮಿಶ್ರ ಸರ್ಕಾರ ಭ್ರಷ್ಟಾಚಾರ ನಡೆಸಿ ಆಡಳಿತ ನಡೆಸುತ್ತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ. ಸಚಿವ ಪುಟ್ಟರಂಗಶೆಟ್ಟಿಯವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.