Publish Date: Sat, 20 Apr 2024 (09:00 IST)
Updated Date: Sat, 20 Apr 2024 (09:15 IST)
ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಇಂದು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇಂದು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ಮೊನ್ನೆಯಷ್ಟೇ ಪ್ರಧಾನಿ ಮೋದಿ ಮೈಸೂರಿನಲ್ಲಿ ಸಮಾವೇಶದಲ್ಲಿ ಭಾಷಣ ಮಾಡಿದ್ದರು. ಅದಾದ ಬಳಿಕ ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ್ದರು. ಇದಾದ ಒಂದೇ ವಾರದಲ್ಲಿ ಮತ್ತೊಮ್ಮೆ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ನಡೆದಿದೆ.
ಇಂದು ಮೊದಲು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮಿಸುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಇಲ್ಲಿ ಮಧ್ಯಾಹ್ನ 2 ಗಂಟೆಗೆ ಚೊಕ್ಕಹಳ್ಳಿ ಗ್ರಾಮದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಪರ ಪ್ರಚಾರ ನಡೆಸಲಿದ್ದಾರೆ.
ಇದಾದ ಬಳಿಕ ಸಂಜೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಅರಮನೆ ಮೈದಾನಕ್ಕೆ ಆಗಮಿಸಲಿದ್ದಾರೆ. ಅರಮನೆ ಮೈದಾನದ ಗಾಯತ್ರಿ ವಿಹಾರ್ ಸಭಾಂಗಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೋದಿಯವರು ಭಾಗವಹಿಸಲಿದ್ದಾರೆ. ಬೆಂಗಳೂರಿನ ಎಲ್ಲಾ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಅದಾದ ಬಳಿಕ ಅವರು ವಾಪಸ್ ದೆಹಲಿಗೆ ತೆರಳಲಿದ್ದಾರೆ. ಮೋದಿ ಆಗಮನ ಹಿನ್ನಲೆಯಲ್ಲಿ ಬಿಜೆಪಿ ಮೊನ್ನೆಯಿಂದಲೇ ಅರಮನೆ ಮೈದಾನದಲ್ಲಿ ಎಲ್ಲಾ ಸಿದ್ಧತೆ ನಡೆಸಿದೆ. ನಿನ್ನೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದಾರೆ. ಸಮಾವೇಶಕ್ಕೆ ಸಾವಿರಾರು ಜನ ಆಗಮಿಸುವ ನಿರೀಕ್ಷೆಯಿದ್ದು, ಎಲ್ಲರಿಗೂ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಎಲ್ಲವನ್ನೂ ಮಾಡಲಾಗಿದೆ.