Publish Date: Tue, 30 Apr 2024 (16:52 IST)
Updated Date: Tue, 30 Apr 2024 (16:54 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಈ ಬಗ್ಗೆ ಜೆಡಿಎಸ್ ಸೋಷಿಯಲ್ ಮೀಡಿಯಾದಲ್ಲೂ ಪ್ರಕಟಣೆ ನೀಡಿದೆ. ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯ ನಂತರ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಲು ನಿರ್ಧರಿಸಲಾಯಿತು. ಇದರ ಅನುಮೋದನೆಗೆ ರಾಷ್ಟ್ರೀಯ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಲಾಯಿತು. ಬಳಿಕ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆಆರ್ ಶಿವಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟುಮಾಡಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪ್ರಸ್ತುತ ತನಿಖೆಗೆ ಎಸ್ಐಟಿ ರಚಿಸಿದ್ದು ತನಿಖಾ ತಂಡವು ಕಾರ್ಯಗಳನ್ನು ಪ್ರಾರಂಭಿಸಿದೆ. ಈ ಜೆಡಿಎಸ್ ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗೆ ಅನುಸಾರವಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.