Publish Date: Mon, 04 Mar 2024 (16:00 IST)
Updated Date: Mon, 04 Mar 2024 (18:52 IST)
ಬೆಂಗಳೂರು -ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂದು ವೈಜ್ಞಾನಿಕ ವರದಿ ಬಿಜೆಪಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸಿರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ ಎಫ್ ಎಸ್ಎಲ್ ವರದಿಯಲ್ಲಿ ಬಟಾಬಯಲಾಗಿದೆ ಎಂದು ಬಿಜೆಪಿ ಟೀಕಿಸಿದೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲಿ ಸಾಬೀತಾಗಿದೆ. ಹೀಗಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಸೋಮವಾರ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಬಿಜೆಪಿ ಸಂದೇಶ ಹಂಚಿಕೊಂಡಿದ್ದು, ಖಾಸಗಿ ಸಂಸ್ಥೆಯೊಂದರ ಮೂಲಕ ಮಾಡಿಸಿರುವ ಎಫ್ಎಸ್ಎಲ್ ಪರೀಕ್ಷೆಯ ವರದಿಯನ್ನು ಶೇರ್ ಮಾಡಿದೆ.
ಹೀಗಾಗಿ ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಪಕ್ಷ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ಆಗ್ರಹಿಸಿದೆ.