Publish Date: Thu, 02 Jan 2025 (15:33 IST)
Updated Date: Thu, 02 Jan 2025 (15:36 IST)
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದರು.
ಈ ವಿಚಾರ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿನ್ ಡೆತ್ನೋಟ್ನಲ್ಲಿ ಪ್ರಿಯಾಂಕ್ ಖರ್ಗೆಯವರ ಹೆಸರೂ ಇದೆ. ಅವರಿಗೆ ಗೌರವ, ಮಾನ, ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ. ಈಶ್ವರಪ್ಪ ವಿಚಾರದಲ್ಲಿ ಅವರು ಏನು ಮಾತಾಡಿದ್ರು? ಈಗ ಅದನ್ನು ನೆನಪಿಸಿಕೊಳ್ಳಲಿ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳಾಗುತ್ತಿವೆ. ವಾಲ್ಮೀಕಿ ನಿಗಮದ ಚಂದ್ರಶೇಖರ್, ದಾವಣೆಗೆರೆಯಲ್ಲಿ ಒಬ್ಬರು ಪಿಸಿ ಹತ್ಯೆ, ರುದ್ರಣ್ಣ, ಸಚಿನ್ ಅವರ ಆತ್ಮಹತ್ಯೆಯಾಗಿದೆ. ವಿಪಕ್ಷವಾಗಿ ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಎಲ್ಲಾ ರೀತಿಯ ಹೋರಾಟ ಮಾಡಿ ಕೇಸ್ ಹಾಕಿಸಿಕೊಂಡಿದ್ದೇವೆ ಎಂದಿದ್ದಾರೆ.
ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಜ4ರಂದು ವಿಜಯೇಂದ್ರ ಸೇರಿದಂತೆ ನಮ್ಮ ಪಕ್ಷದ ಎಲ್ಲ ಮುಖಂಡರು ಕಲಬುರಗಿಯಲ್ಲಿ ಹೋರಾಟ ಮಾಡುತ್ತೇವೆ ಎಂದರು.