Publish Date: Thu, 09 Feb 2023 (20:37 IST)
Updated Date: Thu, 09 Feb 2023 (20:38 IST)
ನಾಳೆಯಿಂದ 24ರವರೆಗೆ ವಿಧಾನಸೌಧದಲ್ಲಿ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಧಿವೇಶನದ ಕಲಾಪಕ್ಕೆ ಅಡ್ಡಿ, ಸಾರ್ವಜನಿಕ ಶಾಂತಿ ಭಂಗ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ ಐಪಿಸಿ ಸೆಕ್ಷನ್ 144 ರ ಅಡಿಯಲ್ಲಿ ತಡೆಯಾಜ್ಞೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಂದೇ ಸ್ಥಳದಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರಿ ಮೆರವಣಿಗೆ, ಪ್ರತಿಭಟನೆ ನಡೆಸುವಂತಿಲ್ಲ. ದೈಹಿಕ ಹಿಂಸೆಗೆ ಉಪಯೋಗಿಸುವ ಆಯುಧ, ಕಲ್ಲು, ಇಟ್ಟಿಗೆಗಳನ್ನು ಕೊಂಡೊಯ್ಯುವಂತಿಲ್ಲ. ಸ್ಫೋಟಕಗಳನ್ನು ಸಿಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದರ ಜೊತೆಗೆ ಯಾವುದೇ ಪ್ರತಿಕೃತಿಗಳನ್ನು ಪ್ರದರ್ಶಿಸುವಂತಿಲ್ಲ ಅಥವಾ ಸುಡುವಂತಿಲ್ಲ ಎಂದು ಆದೇಶಿಸಲಾಗಿದೆ. ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.