ಕೊಪ್ಪಳ: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಂದೂ ಹಾಗೂ ಮುಸ್ಲಿಮರ ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮುಸ್ಲಿಂ ಯುವಕನಿಂದ ಆಗಸ್ಟ್ 3ರಂದು ಇಲ್ಲಿನ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎನ್ನುವ ಯುವಕನ ಕೊಲೆಯಾಗಿತ್ತು. ಅವರ ಕುಟುಂಬದವರಿಗೆ ಸಾಂತ್ವಾನ ಹೇಳಲು ಆ. 10ರಂದು ಕೊಪ್ಪಳಕ್ಕೆ ಬಂದಿದ್ದ ವೇಳೆ ಯತ್ನಾಳ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ಕೊಡುತ್ತೇನೆ. ಈ ಮೂಲಕ ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ, ಇದೀಗ ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಹೇಳಿಕೆ ನೀಡಿದರು. ಇದು ಸಾಕಷ್ಟು ಟೀಕೆಗೂ ಕಾರಣವಾಗಿತ್ತು.
ಆದ್ದರಿಂದ ಇಲ್ಲಿನ ಕುವೆಂಪು ನಗರದ ನಿವಾಸಿಯಾಗಿರುವ ಅಬ್ದುಲ್ ಕಲಾಂ ದೂರು ನೀಡಿದ್ದು ಯತ್ನಾಳ ಹೇಳಿಕೆಯಿಂದಾಗಿ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ.
ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೆ ಅವರನ್ನು ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.