Publish Date: Sat, 12 Jul 2025 (14:02 IST)
Updated Date: Sat, 12 Jul 2025 (14:04 IST)
ಬೆಂಗಳೂರು: ನಾನೇ ಸಿಎಂ ಎಂದು ಪದೇ ಪದೇ ಹೇಳುತ್ತಿರುವ ಸಿಎಂ ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ. ಸಿಎಂ ಕುರ್ಚಿ ಗದ್ದಲದ ನಡುವೆ ರಾಜ್ಯದ ಸಮಸ್ಯೆ ಕಾಣ್ತಿಲ್ಲ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಅಶೋಕ್, 5 ವರ್ಷ ನಾನೇ ಸಿಎಂ ಎಂದು ಹಳ್ಳಿಯಿಂದ ದಿಲ್ಲಿವರೆಗೆ ಹಾದಿ ಬೀದಿಯಲ್ಲಿ ಬೊಬ್ಬೆ ಹೊಡೆಯುವ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚು ಸಿಬ್ಬಂದಿಗಳು 5 ದಿನಗಳಿಂದ ಮಾಡುತ್ತಿರುವ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ, ಕಿವಿಗೆ ಬೀಳುತ್ತಿಲ್ಲ.
ಕುರ್ಚಿ ಕಿತ್ತಾಟದಲ್ಲಿ, ಬಣ ಬಡಿದಾಟದಲ್ಲಿ ಸಂಪೂರ್ಣವಾಗಿ ಮೈಮರೆತಿರುವ ಕಾಂಗ್ರೆಸ್ ಸರ್ಕಾರದ ಯಾವ ಮಂತ್ರಿಗಳೂ ಇದುವರೆಗೂ ಪ್ರತಿಭಟನಾ ನಿರತ ಪಾಲಿಕೆ ಸಿಬ್ಬಂದಿಗಳನ್ನು ಭೇಟಿ ಮಾಡುವ ಗೋಜಿಗೇ ಹೋಗಿಲ್ಲ.
ಸಿಎಂ ಸಿದ್ದರಾಮಯ್ಯ ಅವರೇ, ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬಂತೆ ಅಧಿಕಾರವಿಲ್ಲದ ಕುರ್ಚಿಯಲ್ಲಿ ಎಷ್ಟು ದಿನ ಅಂಟಿಕೊಂಡು ಕೂರುತ್ತೀರಿ ಸ್ವಾಮಿ. ರಾಜೀನಾಮೆ ಕೊಟ್ಟು ಹೊರಡಿ. ಒಂದು ಸುಭದ್ರ, ಸುಸ್ಥಿರ, ಜನಪರ ಆಡಳಿತ ಕೊಡಬಲ್ಲ ಬಲಿಷ್ಠ ಮುಖ್ಯಮಂತ್ರಿಗಾಗಿ ಕನ್ನಡಿಗರು ಕಾಯುತ್ತಿದ್ದಾರೆ. ರಾಜೀನಾಮೆ ಕೊಟ್ಟು ಕನ್ನಡಿಗರ ಆಶಯ ಈಡೇರಿಸಿ ಎಂದು ಆಗ್ರಹಿಸಿದ್ದಾರೆ.