Publish Date: Tue, 05 Aug 2025 (12:29 IST)
Updated Date: Tue, 05 Aug 2025 (12:32 IST)
ಬೆಂಗಳೂರು: ದಿವಾಳಿ ಸರ್ಕಾರ ವಿರುದ್ಧ ಸಾರಿಗೆ ನೌಕರರ ಮುಷ್ಕರ, ರಾಜ್ಯಾದ್ಯಂತ ಬಸ್ ಸಂಚಾರ ಸ್ತಬ್ಧವಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಸಾರಿಗೆ ಮುಷ್ಕರದ ಕುರಿತು ಅವರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್ಸಿಲ್ಲ, ನೌಕರರು, ಉದ್ಯೋಗಿಗಳು ಕೆಲಸಕ್ಕೆ ಹೋಗಲು ಬಸ್ಸಿಲ್ಲ, ನೆಂಟರಿಷ್ಟರ ಮನೆಗಳಿಗೆ, ಶುಭ ಸಮಾರಂಭಗಳಿಗೆ, ಸಾವು-ನೋವಿಗೆ ಹೋಗಲು ಬಸ್ಸಿಲ್ಲ. ಇದು ಬಹುಪಾಲು ಕನ್ನಡಿಗರ ಇವತ್ತಿನ ಬವಣೆ ಎಂದು ಸರ್ಕಾರವನ್ನು ವ್ಯಂಗ್ಯ ಮಾಡಿದ್ದಾರೆ.
ರಾಜ್ಯದ ಖಜಾನೆ ಖಾಲಿ ಮಾಡಿ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಚೆಲ್ಲಾಟ, ಜನಸಾಮಾನ್ಯರಿಗೆ ಪರದಾಟ, ಗೋಳಾಟ, ತೊಳಲಾಟ! ಸಿಎಂ ಸಿದ್ದರಾಮಯ್ಯನವರೇನವರೇ, ನಿಮ್ಮ ಘನಂದಾರಿ ಆಡಳಿತದಿಂದ ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡಿಬಿಟ್ಟರಲ್ಲ ಸ್ವಾಮಿ.
ಸಾರಿಗೆ ನೌಕರರ ಹಿಂಬಾಕಿ ಕೊಡಲು ದುಡ್ಡಿಲ್ಲ, ನೌಕರರ ವೇತನ ಹೆಚ್ಚಳ ಮಾಡಲು ದುಡ್ಡಿಲ್ಲ, ಹೊಸ ಬಸ್ ಖರೀದಿಗೆ ದುಡ್ಡಿಲ್ಲ, ಹಳೆ ಬಸ್ಸುಗಳ ರಿಪೇರಿಗೆ ದುಡ್ಡಿಲ್ಲ.
ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ನಿಮ್ಮ ಅಧಿಕಾರದ ಲಾಲಸೆಗೆ, ದುರಾಡಳಿತಕ್ಕೆ ಜನಸಾಮಾನ್ಯರು ಇನ್ಯಾವ್ಯಾವ ರೀತಿ ಪರದಾಡಬೇಕು, ಇನ್ನೆಷ್ಟು ಕಷ್ಟ ಅನುಭವಿಸಬೇಕು. ಸಿದ್ಧರಾಮಯ್ಯನವರೇ, ದಯವಿಟ್ಟು ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ. ಕನ್ನಡಿಗರಿಗೆ ನೆಮ್ಮದಿಯ ಜೀವನ ಮಾಡಲು ಬಿಡಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.