Publish Date: Sat, 27 Jan 2024 (17:19 IST)
Updated Date: Sat, 27 Jan 2024 (19:23 IST)
ಬೆಂಗಳೂರು:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಮಾಡುವ ಮೂಲಕ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, 2019ರಲ್ಲಿ 26 ಸ್ಥಾನಗಳನ್ನು ಗೆಲ್ಲಲಾಗಿತ್ತು. ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿಯವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದು ಮನವಿ ಮಾಡಿದರು.ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಪ್ರಲ್ಹಾದ್ ಜೋಷಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಜನರಿಗೆ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಕಲಹದಲ್ಲಿ ತೊಡಗಿದೆ. ಇವರ ಕಚ್ಚಾಟದಿಂದ ಅಧಿಕಾರ ಕುಸಿದುಬಿದ್ದಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆಕ್ಷೇಪಿಸಿದರು. ಇದರ ನಡುವೆಯೂ ಅವರು ದುರ್ಮಾರ್ಗದಲ್ಲಿ ಮತ ಗಳಿಸುವ ಕುತಂತ್ರ ನಡೆಸಿದ್ದಾರೆ. ಜನರಿಗೆ ವಾಸ್ತವ ಮನವರಿಕೆ ಮಾಡಿಕೊಡುವ ಸವಾಲು ನಮ್ಮ ಮುಂದಿದೆ ಎಂದು ತಿಳಿಸಿದರು.
ಜನರು ಈ ಸರಕಾರದ ಬಗ್ಗೆ ಬೇಸತ್ತು ಹಿಡಿಶಾಪ ಹಾಕುತ್ತಿದ್ದಾರೆ. ಈ ಸರಕಾರಕ್ಕೆ ಬರಗಾಲದಲ್ಲಿ ರೈತರ ಕಣ್ಣೀರು ಒರೆಸಲು ಆಗಿಲ್ಲ. ಹೆಣ್ಮಕ್ಕಳ ಮಾನ ರಕ್ಷಿಸಲು ಸಾಧ್ಯವಾಗಿಲ್ಲ. ಅರಾಜಕತೆ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಇದೆಲ್ಲವನ್ನು ನೋಡುತ್ತ ಸುಮ್ಮನಿರಲು ಅಸಾಧ್ಯ. ಜನರ ಪರವಾಗಿ, ರಾಜ್ಯದ ಪರವಾಗಿ ನಿಂತು ಹೋರಾಟ ಮಾಡೋಣ ಎಂದು ತಿಳಿಸಿದರು.
ಬಿಜೆಪಿಗೆ ಜಗದೀಶ ಶೆಟ್ಟರ್ ಸೇರಿದ್ದು, ನಮಗೊಂದು ದೊಡ್ಡ ಶಕ್ತಿಯನ್ನು ಕೊಟ್ಟಿದೆ ಎಂದು ಬಿವೈವಿ ಹೇಳಿದ್ದಾರೆ.