Publish Date: Tue, 23 Jul 2024 (16:03 IST)
Updated Date: Tue, 23 Jul 2024 (16:06 IST)
ರಾಮನಗರ: ನಾಲ್ಕು ವರ್ಷದ ಕಂದಮ್ಮನನ್ನು ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆಗೈದ ಪ್ರಕರಣದಲ್ಲಿ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ಎಂಬತನನ್ನು ಬಂಧಿಸಿದ್ದಾರೆ.
ಪೋಕ್ಸೋ ಪ್ರಕರಣದಡಿಯಲ್ಲಿ ಆತನನ್ನು ಬಂಧಿಸಲಾಗಿದೆ.
ಪ್ರಕರಣದ ಹಿನ್ನೆಲೆ: ಹತ್ಯೆಯಾದ ಬಾಲಕಿಯ ಸಂಬಂಧಿಯಾಗಿರುವ ಇರ್ಫಾನ್ ಆಗಾಗ ಬಾಲಕಿ ಮನೆಗೆ ಬಂದು ಹೋಗುತ್ತಿದ್ದ. ಇದೇ ರೀತಿ ಜು.20ರಂದು ಮನೆಗೆ ಬಂದಿದ್ದ ಆತ, ಬಾಲಕಿಗೆ ಐಸ್ ಕ್ರೀಂ ಕೊಡಿಸುವುದಾಗಿ ತನ್ನ ಸ್ಕೂಟರ್ನಲ್ಲಿ ಕರೆದೊಯ್ದಿದ್ದಾನೆ. ಸಂಜೆ 7 ಗಂಟೆಯಾದರೂ ಮಗುವನ್ನು ಮನೆಗೆ ವಾಪಾಸ್ ಕರೆದುಕೊಂಡು ಬರದಿರುವುದನ್ನು ಗಮನಿಸಿದ ಪೋಷಕರು ಇರ್ಫಾನ್ಗೆ ಕರೆ ಮಾಡಿದ್ದಾರೆ.
ಈ ವೇಳೆ ತನಗೆ ಏನು ಗೊತ್ತಿಲ್ಲ ಎಂದು ಇರ್ಫಾನ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಇದರಿಂದ ಅನುಮಾನಗೊಂಡ ಪೋಷಕರು ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಲಾಸಿಪಾಳ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಘಟನೆ ಖಂಡಿಸಿ ಮಾಗಡಿಯ ಮುಸ್ಲಿಂ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿದೆ. ಮಹಿಳೆಯರು ಸೇರಿ ನೂರಾರು ಮಂದಿ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ, ಇಲ್ಲದಿದ್ದರೆ ಎನ್ಕೌಂಟ್ ಮಾಡಿ ಎಂದು ಪೋಷಕರು ಆಗ್ರಹಿಸಿದ್ದಾರೆ.