Publish Date: Thu, 23 Jun 2022 (11:52 IST)
Updated Date: Thu, 23 Jun 2022 (11:54 IST)
ಬೆಂಗಳೂರು : ಸಹೋದ್ಯೋಗಿ ಪೇದೆಯ ಪತ್ನಿಯನ್ನು ಬ್ಲ್ಯಾಕ್ಮೇಲ್ ಮಾಡಿ,
ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಎಂಟು ಪೇದೆಗಳನ್ನು ಸೇವೆಯಿಂದ ವಜಾಗೊಳಿಸಿರುವ ಶಿಸ್ತುಪಾಲನಾ ಸಮಿತಿಯ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿ ಹಿಡಿದಿದೆ.
ವಿಕಾಸ್ ವರ್ಮಾ ಸೇರಿದಂತೆ ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ಮುದ್ರಣ ಪ್ರೈವೇಟ್ ಲಿಮಿಟೆಡ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂಟು ಮಂದಿ ಆರೋಪಿ ಪೇದೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರ ನೇತೃತ್ವದ ವಿಭಾಗೀಯ ಪೀಠ, ಆರೋಪಿಗಳನ್ನು ಸೇವೆಯಿಂದ ವಜಾಗೊಳಿಸಿರುವ ಆದೇಶ ಸೂಕ್ತವಾಗಿದೆ ಎಂದು ತೀರ್ಪು ನೀಡಿದೆ.
ಆರೋಪಿಗಳ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕಷ್ಟು ದಾಖಲೆಗಳಿವೆ. ಶಿಸ್ತುಪಾಲನೆ ಸಮಿತಿಯು ತನ್ನ ಮುಂದಿರುವ ದಾಖಲೆ ಪರಿಗಣಿಸಿಯೇ ಆರೋಪಿಗಳನ್ನು ಸೇವೆಯಿಂದ ವಜಾ ಮಾಡಿದೆ. ಈ ಘಟನೆ ಅಪರೂಪದಲ್ಲಿ ಅಪರೂಪದ್ದಾಗಿದೆ ಹಾಗೂ ಸಿಐಎಸ್ಎಫ್ ಪಡೆಯ ಶಿಸ್ತು ಮತ್ತು ಸದಾಚಾರಕ್ಕೆ ವಿರುದ್ಧವಾಗಿದೆ.
ಆದ್ದರಿಂದ ಆರೋಪಿಗಳನ್ನು ಸೇವೆಯಿಂದ ವಜಾಗೊಳಿಸಿರುವ ಆದೇಶ ಸಮಂಜಸವಾಗಿದೆ. ಅದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯ ಇಲ್ಲವಾಗಿದೆ ಎಂದು ವಿಭಾಗೀಯ ಪೀಠ ತನ್ನ ತೀರ್ಪಿನಲ್ಲಿ ನುಡಿದಿದೆ.