Publish Date: Wed, 08 Dec 2021 (17:50 IST)
Updated Date: Wed, 08 Dec 2021 (18:37 IST)
ವಿಧಾನ ಪರಿಷತ್ ದ್ವೈ ವಾರ್ಷಿಕ ಚುನಾವಣೆ-2021 ಡಿ.10ರಂದು ನಡೆಯಲಿರುವ ಮತದಾನದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಮತದಾರರು ಕೋವಿಡ್ ಲಸಿಕೆ ಪಡೆದಿರಬೇಕೆಂದು ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.ನಗರದಲ್ಲಿಂದು ಕೆ.ಜಿ.ರಸ್ತೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಸಿಬ್ಬಂದಿ, ಮತದಾರರು ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಸೂಚಿಸಲಾಗಿದೆ. ಈ ಸಂಬಂಧ ಪ್ರಮಾಣ ಪತ್ರವನ್ನು ಸಿಬ್ಬಂದಿ ಪರಿಶೀಲನೆ ನಡೆಸಲಾಗುವುದು ಎಂದರು.
ಈ ಮತದಾನ ಪ್ರಕ್ರಿಯೆಯಲ್ಲಿ ಬ್ಯಾಲೆಟ್ ಕಾಗದ ಮುಖ್ಯವಾಗಿದ್ದು, ಇದನ್ನು ಮತದಾರರು ಹೊರಗಡೆ ತೆಗೆದುಕೊಂಡು ಹೋದರೆ ಅಥವಾ ದುರ್ಬಳಕೆ ಮಾಡಿಕೊಂಡರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮತದಾರರು ಎಚ್ಚರ ವಹಿಸುವುದು ಸೂಕ್ತ ಎಂದು ತಿಳಿಸಿದರು.
ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡಿ. 10ರಂದು ನಡೆಯಲಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭಗಳು, ಬೈಕ್ ರ್ಯಾಲಿ, ಬೀದಿ ನಾಟಕ ಮುಂತಾದ ಬಹಿರಂಗ ಪ್ರಚಾರಗಳನ್ನು ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿಯೇ ನಿಲ್ಲಿಸುವಂತೆ ಹಾಗೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಹೇಳಿದರು.