Publish Date: Mon, 22 Sep 2025 (21:42 IST)
Updated Date: Mon, 22 Sep 2025 (21:45 IST)
ದಾವಣಗೆರೆ: ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ರಾಜ್ಯದಲ್ಲಿ ಜಾತಿ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಜಾತಿಗಳ ನಡುವೆ ಸಂಘರ್ಷದ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ವೀರಶೈವ ಲಿಂಗಾಯತ ಹಿಂದೂ ಧರ್ಮದ ಕೆಳಗೆ ಬರುತ್ತದೆ. ಈ ಬಗ್ಗೆ ನಾಡಿನ ಪ್ರಮುಖ ಸ್ವಾಮಿಗಳು ಹಾಗೂ ಜಗದ್ಗುರುಗಳು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಲು ತಿಳಿಸಿದ್ದಾರೆ. ಉಪಜಾತಿಯನ್ನು ಬರೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಪಕ್ಷ ಕೂಡ ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ.
2014ರಲ್ಲಿ ಸಿದ್ದರಾಮಯ್ಯ ಮಾಡಿದ ತಪ್ಪನ್ನೇ ಈಗಲೂ ಮಾಡುತ್ತಿದ್ದಾರೆ. ವೋಟಿಗೋಸ್ಕರ ಓಲೈಕೆಗೋಸ್ಕರ ಈ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಮಾಡಲು ಮುಂದಾಗಿದೆ. ಸುಖಸುಮ್ಮನೆ ರಾಜ್ಯ ಸರ್ಕಾರ ಜಾತಿ ಗಣತಿ ಮಾಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಹೈಕಮಾಂಡ್ ಒತ್ತಡಕ್ಕೆ ಮಣಿದು ಕಾಂತರಾಜ್ ಆಯೋಗದ ವರದಿ ಕಸದ ಬುಟ್ಟಿಗೆ ಹಾಕಲಾಗಿದೆ. ಈಗ 15 ದಿನದಲ್ಲಿ ಜಾತಿಗಣತಿ ಮಾಡುವುದು ಅವೈಜ್ಞಾನಿಕ ಎಂದು ಆಕ್ರೋಶ ಹೊರಹಾಕಿದರು.