Select Your Language

Notifications

webdunia
webdunia
webdunia
webdunia

ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

Modi

Sampriya

ಬೆಂಗಳೂರು , ಭಾನುವಾರ, 28 ಏಪ್ರಿಲ್ 2024 (14:06 IST)
Photo Courtesy X
ಬೆಂಗಳೂರು: ಕಾಂಗ್ರೆಸ್ ಪಕ್ಷವು ಕುಟುಂಬವಾದದಲ್ಲಿ ದೇಶಹಿತವನ್ನು ಮರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಬೆಳಿಗ್ಗೆ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಅವಧಿಯಲ್ಲಿ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಕಾಂಗ್ರೆಸ್ಸಿಗರು ಟೀಕಿಸಿ ವಿರೋಧಿಸಿದ್ದರು. ಜನರನ್ನು ಗೊಂದಲದಲ್ಲಿ ಸಿಲುಕಿಸಿದ ಅವರು, ಇವಿಎಂ ವಿಚಾರದಲ್ಲಿ ಕೂಡ ಸುಳ್ಳು ಹೇಳಿ ಗೊಂದಲ ಮೂಡಿಸಿದ್ದರು. ಸುಪ್ರೀಂ ಕೋರ್ಟ್ ಕೆಲದಿನಗಳ ಹಿಂದೆ ಇವಿಎಂ ವಿಷಯದಲ್ಲಿ ಸ್ಪಷ್ಟ ಆದೇಶ ನೀಡಿದೆ ಎಂದು ವಿವರಿಸಿದರು.

ಬಿಜೆಪಿ- ಎನ್‍ಡಿಎ ಸರಕಾರವು ಕಳೆದ 10 ವರ್ಷಗಳಲ್ಲಿ ಭಾರತೀಯ ನ್ಯಾಯಸಂಹಿತಾ ಮೂಲಕ ಆಂಗ್ಲರ ಮುಷ್ಟಿಯಿಂದ ಜನರನ್ನು ಹೊರತಂದಿದೆ. ಗುಲಾಮಿ ಪದ್ಧತಿಯಿಂದ ಭಾರತೀಯರನ್ನು ಹೊರಕ್ಕೆ ತರಲಾಗಿದೆ ಎಂದು ವಿವರಿಸಿದರು. ಜನರಿಗೆ ನ್ಯಾಯ ನೀಡಲು ಪೂರಕ ಕಾನೂನು ಇದು. ಅತ್ಯಾಚಾರಿಗಳಿಗೆ ಕಠಿಣ ಕಾನೂನು ಇದೆ. ಶೀಘ್ರವೇ ಇದು ಜಾರಿಯಾಗಲಿದೆ ಎಂದರು.

ಕರ್ನಾಟಕದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಚಿಕ್ಕೋಡಿಯಲ್ಲಿ ಜೈನ ಮುನಿ ಹತ್ಯೆ, ಬೆಳಗಾವಿಯಲ್ಲಿ ನಡೆದ ಮಹಿಳೆ ಮೇಲಿನ ದೌರ್ಜನ್ಯವನ್ನು ಪ್ರಸ್ತಾಪಿಸಿದ ಅವರು, ಹುಬ್ಬಳ್ಳಿಯಲ್ಲಿ ಕಾಲೇಜಿನ ವಿದ್ಯಾರ್ಥಿನಿ ಹತ್ಯೆಯಿಂದ ದೇಶದಲ್ಲೇ ಆತಂಕ ಮೂಡಿದೆ. ಕಾಂಗ್ರೆಸ್ ಸರಕಾರವು ತುಷ್ಟೀಕರಣದ ಕಡೆ ಗಮನ ಕೊಡುತ್ತಿದೆ. ನೇಹಾರ ಕುರಿತು ಕಾಂಗ್ರೆಸ್ಸಿಗರಿಗೆ ಕಳಕಳಿ ಇಲ್ಲ ಎಂದು ಟೀಕಿಸಿದರು. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದರು.

ಕಾಂಗ್ರೆಸ್ ಪಕ್ಷವು ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು. ಪಿಎಫ್‍ಐ ಜೊತೆ ಹೊಂದಾಣಿಕೆ ಮಾಡಿಕೊಂಡ ಪಕ್ಷ ಕಾಂಗ್ರೆಸ್ ಎಂದು ಆಕ್ಷೇಪಿಸಿದರು. ಬಿಜೆಪಿ ಸರಕಾರವು ಪಿಎಫ್‍ಐ ನಿಷೇಧಿಸಿದ ಪಕ್ಷ ಎಂದು ತಿಳಿಸಿದರು.

ಸ್ವಾತಂತ್ರ್ಯ ಚಳವಳಿಯನ್ನು ಮತಬ್ಯಾಂಕಿಗಾಗಿ ತುಷ್ಟೀಕರಣದ ಚರಿತ್ರೆಯಾಗಿ ಮಾಡಿದ ಪಕ್ಷ ಕಾಂಗ್ರೆಸ್. ಭಾರತದ ಮಹಾರಾಜರು ಅತ್ಯಾಚಾರಿಗಳು; ಬಡವರ ಜಮೀನನ್ನು ಕಿತ್ತುಕೊಂಡವರೆಂದು ಚರಿತ್ರೆ ಬರೆಸಿದ್ದರು. ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚನ್ನಮ್ಮರ ಅವಮಾನ ಮಾಡಿದ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು. ನಿಜವಾಗಿ ನವಾಬರು, ನಿಜಾಮರು, ಸುಲ್ತಾನರು ಅತ್ಯಾಚಾರ ಮಾಡಿದವರು ಎಂದು ವಿವರಿಸಿದರು.

ಕಾಂಗ್ರೆಸ್ಸಿಗೆ ಔರಂಗಜೇಬನ ಅತ್ಯಾಚಾರ, ಮಂದಿರಗಳ ಧ್ವಂಸ ಮಾಡಿದ್ದು ನೆನಪಿಗೆ ಬರುವುದಿಲ್ಲ. ದೇಗುಲಗಳನ್ನು ಅವಮಾನ ಮಾಡುವವರ ಜೊತೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಆಕ್ಷೇಪಿಸಿದರು. ಭಾರತದ ವಿಭಜನೆಯಲ್ಲಿ ದೊಡ್ಡ ಪಾತ್ರ ವಹಿಸಿದವರನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ ಅವರ ಪ್ರಣಾಳಿಕೆಯಲ್ಲೂ ವಿವರವಾಗಿ ಹೊರಬಂದಿದೆ ಎಂದರು.

ಕಾಂಗ್ರೆಸ್ ಅಧಿಕಾರ ಎಂದರೆ ಅಭಿವೃದ್ಧಿಹೀನ ಸ್ಥಿತಿ ಎಂದು ಜನರು ಅರ್ಥ ಮಾಡಿಕೊಂಡಿದ್ದಾರೆ. ಹಿಂದೆ ವಿದೇಶಿ ಹೂಡಿಕೆ ಕರ್ನಾಟಕದಲ್ಲಿ ಗರಿಷ್ಠ ಮಟ್ಟದಲ್ಲಿತ್ತು. ಕಾಂಗ್ರೆಸ್ ಅಧಿಕಾರದಲ್ಲಿ ಅಭಿವೃದ್ಧಿಶೂನ್ಯ ಸ್ಥಿತಿ ಇದೆ ಎಂದು ವಿವರಿಸಿದರು. ಕಾಂಗ್ರೆಸ್ ಎಂದರೆ ದಿವಾಳಿ ಪರಿಸ್ಥಿತಿ ಎಂದು ಜನರಿಗೆ ಅರ್ಥವಾಗಿದೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸತ್ಯದ ನಾಡಿಗೆ ಸುಳ್ಳಿನ ಸರದಾರ ಮೋದಿಗೆ ಸ್ವಾಗತ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ