Publish Date: Tue, 03 Dec 2024 (19:33 IST)
Updated Date: Tue, 03 Dec 2024 (19:37 IST)
ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಣ ಬಡಿದಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಇದೀಗ ಅನಾಮಧೇಯ ಪತ್ರವೊಂದು ಹೊಸ ಚರ್ಚೆಗೆ ಕಾರಣವಾಗಿದೆ.
ವಿಜಯೇಂದ್ರ, ಯಡಿಯೂರಪ್ಪ, ಅಶೋಕ್ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆಂದ ಗಂಭೀರ ಆರೋಪ ಮಾಡಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆಯಲಾಗಿದೆ.
ಕೆಳಮಟ್ಟದ ಬಿಜೆಪಿ ಸದಸ್ಯರ ಗುಂಪಾದ ನಾವು, ಕರ್ನಾಟಕದ ಬಿಜೆಪಿ ನಾಯಕತ್ವದಲ್ಲಿ ನಡೆಯುತ್ತಿರುವ ದುಃಸ್ಥಿತಿಯನ್ನು ಹಂಚಿಕೊಳ್ಳಲು ಪತ್ರ ಬರೆಯುತ್ತಿದ್ದೇವೆ. ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ 3 ಕ್ಷೇತ್ರಗಳಲ್ಲೂ ಸೋತಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಅವರ ತಂದೆ ಯಡಿಯೂರಪ್ಪ ನಡೆಸುತ್ತಿರುವ ಒಪ್ಪಂದ ರಾಜಕೀಯದ ಮೇಲೆ ಬೆಳಕು ಚೆಲ್ಲಿದೆ ಎಂದು ಹೇಳಲಾಗಿದೆ.
ಈ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜತೆ ಕೈ ಜೋಡಿಸಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ರಕ್ಷಿಸಿದ ಕಾರಣಕ್ಕೆ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಾಕಷ್ಟು ಅವಕಾಶ ಇದ್ದರೂ ಕೈಚೆಲ್ಲಿದ್ದಾರೆ.
ಆದ್ದರಿಂದ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಇಳಿಸಿ, ಪಕ್ಷ ಉಳಿಸಿ. ಈ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸದಿದ್ದರೆ ಭವಿಷ್ಯದಲ್ಲಿ ಪಕ್ಷದ ಪತನಕ್ಕೆ ಕಾರಣವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಈ ಪತ್ರ ಹೊಸ ಚರ್ಚೆಗೆ ಕಾರಣವಾಗಿದೆ.