Publish Date: Tue, 05 Jul 2022 (15:51 IST)
Updated Date: Tue, 05 Jul 2022 (15:56 IST)
ನಗರದ ಖಾಸಗಿ ಹೋಟೆಲ್ನಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದ ಪ್ರಸಿಡೆಂಟ್ ಹೋಟೆಲ್ನಲ್ಲಿ ಚಂದ್ರಶೇಖರ ಗುರೂಜಿ ತಂಗಿದ್ದರು.
ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ. ಜ್ಯೋತಿಷ್ಯದಿಂದ ನೊಂದವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಭಕ್ತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಚಾಕು ಹಿಡಿದು ಹೋಟೆಲ್ನಿಂದ ಹೊರಗೆ ಓಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸರಳ ವಾಸ್ತುವಿನ ಸಂಶೋಧಕರಾಗಿದ್ದ ಡಾ.ಚಂದ್ರಶೇಖರ ಅಂಗಡಿ(ಗುರೂಜಿ) ಅವರು ಚಿಕ್ಕಂದಿನಲ್ಲೇ ಆಧ್ಯಾತ್ಮದತ್ತ ಆಸಕ್ತಿ ಹೊಂದಿದ್ದರು. 8 ವರ್ಷ ವಯಸ್ಸಿನಲ್ಲಿದ್ದಾಗಲೇ ತಮ್ಮೂರಿನ ಹಳೆಯ ದೇವಾಲಯವೊಂದರ ಜೀರ್ಣೋದ್ಧಾರಕ್ಕಾಗಿ ಜನರಿಂದ ದೇಣಿಗೆ ಸಂಗ್ರಹಿಸಿ ಅಭಿವೃದ್ಧಿ ಮಾಡಿದ್ದರು. 14ನೇ ವಯಸ್ಸಿನಲ್ಲಿ ಭಾರತೀಯ ಸೇನೆಗೆ ಸೇರಬೇಕೆಂಬ ಬಯಕೆ ಅವರದ್ದಾಗಿತ್ತಾದರೂ ಅನಾರೋಗ್ಯ ಕಾರಣಕ್ಕೆ ಅದು ಸಾಕಾರಗೊಳ್ಳಲಿಲ್ಲ. ಸಿವಿಲ್ ಇಂಜಿನಿಯರ್ ಪದವಿ ಪಡೆದ ಬಳಿಕ ಮುಂಬೈನಲ್ಲಿ ಕಾಂಟ್ರ್ಯಾಕ್ಟರ್ ಆಗಿ ಕೆಲಸ ಆರಂಭಿಸಿದ್ದರು. 1995 ರಲ್ಲಿ 'ಶರಣ ಸಂಕುಲ ಟ್ರಸ್ಟ್' ಆರಂಭಿಸಿ ಸಾಮಾಜಿಕ ಕಾರ್ಯದಲ್ಲಿ ನಿರತರಾಗಿದ್ದರು.