Publish Date: Sat, 09 Oct 2021 (20:54 IST)
Updated Date: Sat, 09 Oct 2021 (20:56 IST)
ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ನೀಡಲು ಜೈಲು ಅಧಿಕಾರಿಗಳು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಎರಡು ವಾರ ಕಾಲಾವಕಾಶ ನೀಡಿದೆ.
ಪ್ರಕರಣದ ತನಿಖೆಯನ್ನು ವಿಳಂಬ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್. ಗೀತಾ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಎಸ್ ಸಿ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣದ ತನಿಖೆಯನ್ನು 30 ದಿನಗಳಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು. ತಪ್ಪಿದರೆ ಮುಂದಿನ ವಿಚಾರಣೆಗೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾಗಬೇಕು ಎಂದು 2021ರ ಸೆ.7ರಂದು ಹೈಕೋರ್ಟ್ ತಾಕೀತು ಮಾಡಿತ್ತು. ಅದರಂತೆ ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ವಕೀಲ ವಿ.ಶ್ರೀನಿಧಿ ಹಾಜರಾಗಿ, ಇಂದಿನ ವಿಚಾರಣೆಗೆ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಹಾಜರಾಗಬೇಕಿತ್ತು. ಆದರೆ, ವೈಯಕ್ತಿಕ ಕಾರಣದಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಅದನ್ನು ಪರಿಗಣಿಸಿದ ಪೀಠ, ಅರ್ಜಿ ಸಂಬಂಧ 2021ರ ಸೆ.7ರಂದು ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಎರಡು ವಾರದಲ್ಲಿ ಪಾಲಿಸಬೇಕು ಎಂದು ಸರ್ಕಾರಿ ವಕೀಲರಿಗೆ ಸೂಚಿಸಿತು.