Publish Date: Fri, 21 Jan 2022 (16:10 IST)
Updated Date: Fri, 21 Jan 2022 (18:19 IST)
ಕರ್ನಾಟಕದಲ್ಲಿ ಮಕ್ಕಳಲ್ಲಿ ಕೊವಿಡ್-19 ಸೋಂಕಿನ ಪಾಸಿಟಿವಿಟಿ ದರ ಕಡಿಮೆಯಾಗಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಶಾಲೆಗಳನ್ನು ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯ ನಂತರ ಮಾತನಾಡಿರುವ ಶಿಕ್ಷಣ ಸಚಿವ ನಾಗೇಶ್, ಬೆಂಗಳೂರಿನಲ್ಲಿ ಕೊವಿಡ್-19 ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಜನವರಿ 29ರವರೆಗೂ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದರು.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕುರಿತು ಜಿಲ್ಲಾವಾರು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಯಿತು. ಮಕ್ಕಳಲ್ಲಿ ಕೊವಿಡ್-19 ಸೋಂಕಿನ ಪಾಸಿಟಿವಿಟಿ ದರ ಕಡಿಮೆಯಾಗಿದೆ. ಈ ಹಿನ್ನೆಲೆ ಎಲ್ಲ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಇದರ ಹೊರತಾಗಿ ಶಾಲೆಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾದರೆ 3 ರಿಂದ 7 ದಿನಗಳವರೆಗೆ ಶಾಲೆಗಳನ್ನು ಬಂದ್ ಮಾಡಿ, ತದನಂತರ ಎಂದಿನಂತೆ ಪುನಾರಂಭಿಸಲಾಗುವುದು ಎಂದು ತಿಳಿಸಿದರು.
ಮಕ್ಕಳಲ್ಲಿ ಕೊರೊನಾವೈರಸ್ ಪಾಸಿಟಿವಿಟಿ ದರ:
ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 40 ಸಾವಿರದ ಗಡಿ ದಾಟಿದೆ. ಇದರ ಮಧ್ಯೆಯೂ ಮಕ್ಕಳಲ್ಲಿ ಸೋಂಕಿನ ಪಾಸಿಟಿವಿಟಿ ದರ ತೀರಾ ಕಡಿಮೆಯಾಗಿದೆ. 5 ರಿಂದ 12 ವರ್ಷ ವಯೋಮಾನದ 5.33,144 ಮಕ್ಕಳನ್ನು ಕೊವಿಡ್-19 ಸೋಂಕಿನ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವಿಟಿ ದರ ಶೇ.5.94ರಷ್ಟು ಇರುವುದು ಪತ್ತೆಯಾಗಿದೆ. ಬೆಂಗಳೂರು ನಗರದಲ್ಲಿ ಈ ವಯೋಮಾನದ ಮಕ್ಕಳ ಕೊರೊನಾವೈರಸ್ ಪಾಸಿಟಿವಿಟಿ ದರವು ಶೇ.14.12ರಷ್ಟಿದೆ. ಮೈಸೂರು, ತುಮಕೂರು, ಹಾಸನ ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಮಾತ್ರ ಪಾಸಿಟಿವಿಟಿ ದರ ಶೇ.9ಕ್ಕಿಂತ ಹೆಚ್ಚಾಗಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.