Publish Date: Tue, 10 May 2022 (20:42 IST)
Updated Date: Tue, 10 May 2022 (20:44 IST)
ರಾಜ್ಯದಲ್ಲಿ ಮೇ 16ರಿಂದ ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳು ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ನಾಗೇಶ್ ಅವರು ತಿಳಿಸಿದರು.
ಕೋವಿಡ್ ಕಾರಣ 2 ವರ್ಷಗಳಿಂದ ಉಂಟಾಗಿರುವ ಕಲಿಕಾ ಹಿನ್ನಡೆಯಲ್ಲಿ ಸರಿದೂಗಿಸಲು ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇತರ ರಾಜ್ಯಗಳಿಗೂ ಕರ್ನಾಟಕದ ಯೋಜನೆ ಮಾದರಿಯಾಗಿದೆ. ಕಲಿಕಾ ಚೇತರಿಕೆ ಯೋಜನೆಯು ವರ್ಷವಿಡೀ ನಡೆಯಲಿದೆ. ಈ ಹಿನ್ನೆಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಘೋಷಿಸಲಾಗಿದೆ ಎಂದು ಸಚಿವ ನಾಗೇಶ್ ತಿಳಿಸಿದರು.
ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಅನುಷ್ಠಾನಗೊಳಿಸಲು ಅಗತ್ಯವಾದ ಸಂಪನ್ಮೂಲಗಳನ್ನು (ವಿದ್ಯಾರ್ಥಿಗಳಿಗೆ ಕಲಿಕಾ ಹಾಳೆ ಮತ್ತು ಶಿಕ್ಷಕರ ಕೈಪಿಡಿ) ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ಅಲ್ಲದೇ, ಶಿಕ್ಷಣ ಸಂಸ್ಥೆಗಳು ಬಯಸಿದರೆ ಅಗತ್ಯ ತರಬೇತಿಯನ್ನು ನೀಡಲು ಶಿಕ್ಷಣ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುತ್ತದೆ' ಎಂದು ಸಚಿವರು ತಿಳಿಸಿದರು.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಮೇ ಮೂರನೇ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.