Publish Date: Fri, 14 Jul 2023 (16:27 IST)
Updated Date: Fri, 14 Jul 2023 (17:28 IST)
ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ.. ಪತ್ರದಲ್ಲಿ ಬರೆದಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ 'ಶಕ್ತಿ ಯೋಜನೆ' ಯಿಂದ ಧರ್ಮಸ್ಥಳಕ್ಕೆ ಬರುವ ಮಹಿಳೆಯ ಪ್ರಮಾಣ ಹೆಚ್ಚಾಗಿದೆ. ಮಂಜುನಾಥ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಅವಕಾಶ ಇದ್ದಾಗ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಹ್ವಾನ ನೀಡಿದ್ದಾರೆ.. ಈ ಪತ್ರವನ್ನು ಟ್ವೀಟರ್ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, 14 ನೇ ಬಜೆಟ್ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.