Publish Date: Mon, 18 Apr 2022 (18:24 IST)
Updated Date: Mon, 18 Apr 2022 (18:27 IST)
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ಧಹಸ್ತ. ನೀವೇ ಪರ್ಸೆಂಟೇಜ್ ವ್ಯವಹಾರದ ಪಿತಾಮಹ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೆ ವಾಗ್ದಾಳಿ ನಡೆಸಿದ್ದಾರೆ. ಆಪ್ತ ಶಾಸಕರಿಗೆ ಮೀಟಿಂಗ್ಗೆ ಇಂತಿಷ್ಟು ಎಂದು ಕೊಟ್ಟು ಕಮಿಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ ಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ನ್ಯಾ.ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ ಎಂದಿದ್ದಾರೆ. ನಿಮ್ಮ ಕತ್ತಲೆ ಮುಖವಾಡ ಪರ್ಸೆಂಟೇಜ್ ಪಲ್ಲಕ್ಕಿಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಇನ್ನೇನು ಕಳಚಿ ಬೀಳಲಿದೆ. ನಿಮ್ಮ ಸುಳ್ಳು ನಿಮ್ಮನ್ನೇ ಸುಡುವ ಕಾಲ ಸನಿಹದಲ್ಲಿದೆ, ಸಿದ್ಧ ಸೂತ್ರಧಾರ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ಜೆಡಿಎಸ್ ಜ್ವರ ಬಂದುಬಿಟ್ಟಿದೆ ಎಂದಿದ್ದಾರೆ.