Publish Date: Sat, 23 Mar 2024 (16:57 IST)
Updated Date: Sat, 23 Mar 2024 (17:00 IST)
ಬೆಂಗಳೂರು: ರಾಜ್ಯಕ್ಕೆ ಬರ ಪರಿಹಾರ ಕೊಡಲಿಲ್ಲವೆಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಎಷ್ಟೇ ಬಾರಿ ಮನವಿ ಮಾಡಿದರೂ ಕೇಂದ್ರ ಸರ್ಕಾರ ನಮಗೆ ಬರ ಪರಿಹಾರ ಕೊಟ್ಟಿಲ್ಲ. ಹೀಗಾಗಿ ನಮಗೆ ಬರ ಪರಿಹಾರ ಕೊಡಲು ಕೇಂದ್ರಕ್ಕೆ ನಿರ್ದೇಶಿಸಿ ಎಂದು ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆರ್ಟಿಕಲ್ 32 ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ನಮ್ಮ ಮನವಿಗೂ ಕಿವಿಗೊಡದ ಕೇಂದ್ರಕ್ಕೆ ಸುಪ್ರೀಂ ಕೋರ್ಟೇ ಸಲಹೆ ನೀಡಲಿ ಎಂದು ರಿಟ್ ಅರ್ಜಿ ಸಲ್ಲಿಸಲಾಗಿದೆ ಎಂದಿದ್ದಾರೆ.
ಈ ಮೊದಲು ಕೇಂದ್ರ ಸರ್ಕಾರ ಬರ ಪರಿಹಾರ ಕೊಡುತ್ತಿಲ್ಲ ಮತ್ತು ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ. ದಕ್ಷಿಣ ಭಾರತದವರ ತೆರಿಗೆ ಹಣವನ್ನು ಉತ್ತರ ಭಾರತದವರಿಗೆ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಹೋರಾಟವನ್ನೇ ಕೈಗೊಳ್ಳಲಾಗಿತ್ತು. ಇದೀಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಸಿದ್ದು ಸರ್ಕಾರ ಕೇಂದ್ರದ ವಿರುದ್ಧ ಕೋರ್ಟ್ ಸಮರ ಸಾರಲು ಹೊರಟಿದೆ.