ಬೆಂಗಳೂರು: ಕವಿ ಬೇಂದ್ರೆಯವರು ಅನ್ನಬ್ರಹ್ಮ ಎಂದಿದ್ದಾರೆ. ಅನ್ನದ ಬೆಲೆ ನನಗೆ ಗೊತ್ತಿದೆ. ಅದಕ್ಕೇ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ "ವಿಶ್ವ ಆಹಾರ ದಿನ" ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು.
ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ.
ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ.
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು.
ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದಿದ್ದಾರೆ.