ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಇದೀಗ ಮತ್ತೊಮ್ಮೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ರಾಜ್ಯದ ಕೆಲವು ಕಾಂಗ್ರೆಸ್ ಶಾಸಕರು ನಾಯಕತ್ವ ಬದಲಾವಣೆ ವಿಚಾರವಾಗಿ ಮೌನವಾಗಿರುವ ಹೈಕಮಾಂಡ್ ಮೇಲೆ ಮುನಿಸಿಕೊಂಡಿದ್ದಾರೆ. ಸದ್ಯದಲ್ಲೇ ದೆಹಲಿಗೆ ಹೋಗಲು ಸಿದ್ಧತೆ ನಡೆಸಿದ್ದಾರೆ ಎಂದು ಸುದ್ದಿಯಾಗುತ್ತಿದೆ.
ಇದರ ಬಗ್ಗೆ ಈಗ ಯತೀಂದ್ರ ಸಿದ್ದರಾಮಯ್ಯ, ಯಾರೂ ಬದಲಾವಣೆ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಬರೀ ಮಾಧ್ಯಮಗಳು ಮಾತ್ರ ಚರ್ಚೆ ಮಾಡುತ್ತಿವೆ. ರಾಜ್ಯದಲ್ಲಿ ಬೇರೆ ವಿಚಾರಗಳು ನಡೆಯುತ್ತಿದೆ. ಬಜೆಟ್ ಮಂಡಿಸಬೇಕಿದೆ. ಕೇಂದ್ರವೂ ಹಣ ಕೊಡುತ್ತಿಲ್ಲ. ಅದರ ಬಗ್ಗೆ ಚರ್ಚೆಯಾಗಬೇಕಿದೆ.
ಸದ್ಯಕ್ಕೆ ಯಾರೂ ಸಿಎಂ ಬದಲಾವಣೆ ಮಾಡಬೇಕು ಎಂದು ಹೇಳಿಲ್ಲ. ಹೈಕಮಾಂಡ್ ಕೂಡಾ ಸಿದ್ದರಾಮಯ್ಯನವರನ್ನು ತೆಗಿಯಬೇಕು ಎಂದಿದ್ದಕ್ಕೆ ಮನ್ನಣೆ ಕೊಟ್ಟಿಲ್ಲ. ಹೀಗಾಗಿ ಸದ್ಯದ ಮಟ್ಟಿಗೆ ಯಾವುದೇ ಬದಲಾವಣೆಯಿಲ್ಲ. ನನ್ನ ಪ್ರಕಾರ ಹೈಕಮಾಂಡ್ ನವರು ಸದ್ಯಕ್ಕೆ ಯಾವುದೇ ಬದಲಾವಣೆ ಮಾಡಲ್ಲ ಎಂದು ಸ್ಪಷ್ಟವಾಗಿ ಸಂದೇಶ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರೇ ಐದು ವರ್ಷ ಮುಂದುವರಿಯುತ್ತಾರೆ ಎಂದು ನನಗೆ ವಿಶ್ವಾಸವಿದೆ ಎಂದಿದ್ದಾರೆ.