Publish Date: Sat, 17 Nov 2018 (08:50 IST)
Updated Date: Sat, 17 Nov 2018 (08:52 IST)
ಮೈಸೂರು: ಮೈಸೂರು ಮೇಯರ್ ಸ್ಥಾನ ವಿಚಾರವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತಿಕ್ಕಾಟ ನಡೆದಿತ್ತು. ಆದರೆ ಇದು ದೋಸ್ತಿ ಸರ್ಕಾರದ ಮೇಲೆ ಪರಿಣಾಮ ಬೀರುವ ಮೊದಲೇ ಎರಡೂ ಪಕ್ಷಗಳು ಒಮ್ಮತಕ್ಕೆ ಬಂದಿವೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟಿದ್ದೇವೆ. ಹಾಗಾಗಿ ಮೈಸೂರಿನಲ್ಲಿ ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟು ಕೊಡಲಿ ಎಂದು ಸಾ ರಾ ಮಹೇಶ್ ಆಗ್ರಹಿಸಿದ್ದರು.
ಇದಕ್ಕೆ ಪ್ರತ್ಯುತ್ತರ ನೀಡಿದ್ದ ಸಿದ್ದರಾಮಯ್ಯ ‘ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಟಿ ದೇವೇಗೌಡರಿದ್ದಾರೆ. ಸಂಪುಟದಲ್ಲಿ ಸಾ ರಾ ಮಹೇಶ್ ಸಚಿವರಾಗಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಧ್ವನಿಯ ಅಗತ್ಯವಿದೆ. ಈ ಉದ್ದೇಶಕ್ಕಾಗಿ ಮೈಸೂರು ನಗರ ಪಾಲಿಕೆ ಮೇಯರ್ ಸ್ಥಾನವನ್ನು ನಮ್ಮ ಪಕ್ಷಕ್ಕೆ ನೀಡುವಂತೆ ಕೇಳಿದ್ದೇವೆ, ಇದು ನ್ಯಾಯಸಮ್ಮತವಾದ ಬೇಡಿಕೆಯೂ ಹೌದು’ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದರು.
ಇದೀಗ ಮಂಗಳೂರಿನಲ್ಲಿ ಸಭೆ ನಡೆಸಿದ್ದ ಜೆಡಿಎಸ್ ಸದಸ್ಯರು ಕಾಂಗ್ರೆಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಿದ್ದಾರೆ. ಆದರೆ ಇದು ಪೂರ್ಣಾವಧಿಗೆ ಅಲ್ಲ. ಒಂದು ವರ್ಷ ಕಾಂಗ್ರೆಸ್ ಇನ್ನೊಂದು ವರ್ಷ ಜೆಡಿಎಸ್ ನಾಯಕರು ಮೇಯರ್ ಆಗಲಿದ್ದಾರೆ. ಈ ಮೂಲಕ ಎರಡೂ ಪಕ್ಷಗಳು ಮೈತ್ರಿಗೆ ಭಂಗ ಬಾರದಂತೆ ಒಮ್ಮತಕ್ಕೆ ಬಂದಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.