Publish Date: Mon, 19 Nov 2018 (08:47 IST)
Updated Date: Mon, 19 Nov 2018 (08:49 IST)
ಬೆಂಗಳೂರು: ಮೊನ್ನೆಯಷ್ಟೇ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ನಿಭಾಯಿಸುವೆ ಎಂದಿದ್ದ ಡಿಸಿಎಂ ಪರಮೇಶ್ವರ್ ಹೇಳಿಕೆ ಬಳಿಕ ಸಿಎಂ ಸ್ಥಾನದ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದಿದ್ದಾರೆ.
ಈ ಮೂಲಕ ಡಿಸಿಎಂ ಪರಮೇಶ್ವರ್ ಗೆ ಪರೋಕ್ಷ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ನಿಭಾಯಿಸುವ ಸಾಮರ್ಥ್ಯವಿರುವ ಅನೇಕರಿದ್ದಾರೆ. ಆದರೆ ಅವರೆಲ್ಲಾ ಸಿಎಂ ಸ್ಥಾನದ ಆಕಾಂಕ್ಷಿಗಳೆಂದು ಅರ್ಥವಲ್ಲ. ಪರಮೇಶ್ವರ್ ತಮ್ಮ ಆಸೆ ಹೇಳಿಕೊಂಡಿದ್ದಾರಷ್ಟೆ ಎಂದು ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಹೇಳಿದ್ದಾರೆ.
ಜತೆಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕೂಡಾ ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಐದು ವರ್ಷದವರೆಗೂ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಎಂದು ಪುನರುಚ್ಚರಿಸಿದ್ದಾರೆ. ಪರಮೇಶ್ವರ್ ಯಾವ ಅರ್ಥದಲ್ಲಿ ಹೇಳಿದರೋ ಗೊತ್ತಿಲ್ಲ. ಕಾಂಗ್ರೆಸ್ ಹೈಕಮಾಂಡ್ ಕೂಡಾ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಎಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.