Publish Date: Wed, 28 Sep 2022 (21:16 IST)
Updated Date: Wed, 28 Sep 2022 (21:22 IST)
ದೇಶದ ಆಂತರಿಕ ಭದ್ರತೆಗೆ ಆತಂಕ ತಂದೊಡ್ಡಿದ್ದ PFI ಹಾಗೂ ಅದರ ಸಹವರ್ತಿ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವುದನ್ನು ಇಂಧನ ಸಚಿವ V.ಸುನಿಲ್ ಕುಮಾರ್ ಸ್ವಾಗತಿಸಿದ್ದಾರೆ. PFI, ಐಸಿಸ್ನಂಥ ಜಾಗತಿಕ ಉಗ್ರ ಸಂಘಟನೆಗಳ ಜತೆ ಸಂಬಂಧ ಹೊಂದಿತ್ತು. ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲ, ಮುಸ್ಲಿಂ ಯುವಕರ ತಲೆಕೆಡಿಸಿ ಅವರನ್ನು ಐಸಿಸ್ ಸಂಘಟನೆಗೆ ಕಳುಹಿಸುತ್ತಿತ್ತು. ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲೂ ಇದೇ ಸಂಘಟನೆ ಪಾತ್ರ ಇರುವುದನ್ನು ಕೇಂದ್ರ ಗೃಹ ಇಲಾಖೆ ಉಲ್ಲೇಖಿಸಿದ್ದು, ಭವಿಷ್ಯದಲ್ಲಿ PFI ನಡೆಸಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ PFI ಈ ಮಟ್ಟಿಗೆ ಬೆಳೆಯುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ ಎಂದು ನೇರವಾಗಿ ಆರೋಪಿಸುತ್ತೇನೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ PFI ಸಂಘಟನೆಯ ವಿರುದ್ಧ ದಾಖಲಾಗಿದ್ದ, 100ಕ್ಕೂ ಹೆಚ್ಚು ಪ್ರಕರಣ ವಾಪಸ್ ಪಡೆಯಲಾಗಿತ್ತು. 1400ಕ್ಕೂ ಹೆಚ್ಚು PFI ಉಗ್ರರಿಗೆ ಸಿದ್ದರಾಮಯ್ಯ ಕ್ಷಮಾದಾನ ನೀಡಿದ್ದರು. ಇದರ ಫಲವಾಗಿ ರಾಜ್ಯದಲ್ಲಿ ಹಿಂದು ಕಾರ್ಯಕರ್ತರ ಸರಣಿ ಕೊಲೆಗೆ ಕಾಂಗ್ರೆಸ್ ಕಾರಣವಾಗಿತ್ತು ಎಂದು ಸುನಿಲ್ ಕುಮಾರ್ ಆರೋಪಿಸಿದ್ದಾರೆ.