Publish Date: Sat, 29 Oct 2022 (15:30 IST)
Updated Date: Sat, 29 Oct 2022 (15:33 IST)
ಭಯೋತ್ಪಾದನೆಯನ್ನು ಸರ್ಕಾರಿ-ಅನುದಾನಿತ ಉದ್ಯಮವನ್ನಾಗಿಸಿಕೊಂಡಿರುವ ದೇಶಗಳ ಬಣ್ಣ ಬಯಲಾಗಲು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕ್ರಮಗಳು ಪರಿಣಾಮಕಾರಿಯಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ದೆಹಲಿಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿಯ ಸಭೆಯಲ್ಲಿ ಮಾತನಾಡಿದ ಜೈಶಂಕರ್, ಮನುಕುಲಕ್ಕೆ ಎದುರಾಗಿರುವ ಗಂಭೀರ ಬೆದರಿಕೆಗಳಲ್ಲಿ ಭಯೋತ್ಪಾದನೆಯೂ ಒಂದು ಎಂದು ಆತಂಕ ವ್ಯಕ್ತಪಡಿಸಿದರು. ವಿಶ್ವಸಂಸ್ಥೆಯ ಪ್ರಯತ್ನಗಳ ಹೊರತಾಗಿಯೂ, ಭಯೋತ್ಪಾದನೆ ವಿಶೇಷವಾಗಿ ಏಷ್ಯಾ ಮತ್ತು ಆಫ್ರಿಕಾದಲ್ಲಿ ಹೆಚ್ಚುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಕಳೆದ ಎರಡು ದಶಕಗಳಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸಲು ರೂಪುರೇಷೆ ರೂಪಿಸುತ್ತಾ ಬಂದಿದೆ. ಭಯೋತ್ಪಾದನೆಯನ್ನು ರಾಜ್ಯ-ಅನುದಾನಿತ ಉದ್ಯಮವಾಗಿ ಪರಿವರ್ತಿಸಿರುವ ದೇಶಗಳ ಬಣ್ಣ ಬಯಲಾಗುವಂತೆ ಮಾಡಲು ವಿಶ್ವಸಂಸ್ಥೆಯ ಕ್ರಮಗಳು ತುಂಬಾ ಪರಿಣಾಮಕಾರಿಯಾಗಿವೆ. ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ಭಯೋತ್ಪಾದಕರ ಟೂಲ್ಕಿಟ್ನಲ್ಲಿ ಪ್ರಬಲ ಸಾಧನಗಳಾಗಿ ಬಳಕೆಯಾಗುತ್ತಿವೆ ಎಂದು ಆರೋಪಿಸಿದರು.